
ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ
ಬಿಜೆಪಿ ಶಾಸಕರ ಅಡ್ಡಮತದಾನ; ‘ಕೈ’ಕೊಟ್ಟವರ ಪತ್ತೆಗೆ ಧರ್ಮಸ್ಥಳದಲ್ಲಿ ಆಣೆ-ಪ್ರಮಾಣ!
ತಾಯಿ ಪಕ್ಷಕ್ಕೆ ದ್ರೋಹ ಮಾಡಿದವರು ಯಾರೆಂದು ಶ್ರೀಕ್ಷೇತ್ರದಲ್ಲಿ ಬಹಿರಂಗವಾಗಲಿ ಎಂದು ವಿಜಯೇಂದ್ರ ಹೇಳಿರುವುದು ತೀವ್ರ ಕುತೂಹಲ ಮೂಡಿಸಿದೆ
ವಿಧಾನ ಪರಿಷತ್ನ ಏಳು ಸ್ಥಾನಗಳಿಗೆ ನಡೆದ ಚುನಾವಣೆಯಲ್ಲಿ ಮೈತ್ರಿಪಕ್ಷಗಳಿಗೆ ಶಾಕ್ ಕೊಟ್ಟು, ಕಾಂಗ್ರೆಸ್ ಪರ ಅಡ್ಡಮತದಾನ ಮಾಡಿದ ಶಾಸಕರ ಪತ್ತೆಗಾಗಿ ರಾಜ್ಯ ಬಿಜೆಪಿ ಈಗ ಧರ್ಮಸ್ಥಳದಲ್ಲಿ ಆಣೆ ಪ್ರಮಾಣ ಮಾಡಿಸಲು ಮುಂದಾಗಿದೆ.
ಪರಿಷತ್ ಚುನಾವಣೆಯಲ್ಲಿ ಅಡ್ಡ ಮತದಾನ ಮಾಡಿರುವ ಹಿನ್ನೆಲೆಯಲ್ಲಿ ಪಕ್ಷದ ಶಾಸಕರ ಸಭೆ ನಡೆಸಿದ ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ. ವಿಜಯೇಂದ್ರ ಅವರು, ತಾಯಿ ಪಕ್ಷಕ್ಕೆ ದ್ರೋಹ ಮಾಡಿದವರು ಯಾರೆಂದು ಶ್ರೀಕ್ಷೇತ್ರದಲ್ಲಿ ಬಹಿರಂಗವಾಗಲಿ ಎಂದು ಹೇಳಿರುವುದು ತೀವ್ರ ಕುತೂಹಲ ಮೂಡಿಸಿದೆ.
ಹೈಕಮಾಂಡ್ ಅಂಗಳಕ್ಕೆ ವಿವಾದ
ಪರಿಷತ್ ಚುನಾವಣೆ ಫಲಿತಾಂಶ ಹೊರಬೀಳುತ್ತಿದ್ದಂತೆ ಬಿಜೆಪಿ ಮತ್ತು ಜೆಡಿಎಸ್ನಿಂದ ಒಟ್ಟು 11 ಮತಗಳು ಅಡ್ಡ ಮತದಾನವಾಗಿರುವುದು ದೃಢಪಟ್ಟಿತ್ತು. ಬಿಜೆಪಿಯಿಂದ ಕನಿಷ್ಠ 4 ರಿಂದ 5 ಶಾಸಕರು ಪಕ್ಷದ ತೀರ್ಮಾನದ ವಿರುದ್ಧ ಮತ ಚಲಾಯಿಸಿದ್ದಾರೆ ಎಂಬ ಚರ್ಚೆ ಜೋರಾಗಿ ನಡೆಯುತ್ತಿದ್ದು, ಈ ವಿಚಾರ ಹೈಕಮಾಂಡ್ ಅಂಗಳ ತಲುಪಿದೆ.
"ಚುನಾವಣೆಯಲ್ಲಿ ನಮ್ಮ ಕಡೆಯಿಂದ ಅಡ್ಡ ಮತದಾನ ಆಗಿರುವ ವಿಚಾರದಿಂದ ಪಕ್ಷದ ನಿಷ್ಠಾವಂತ ಕಾರ್ಯಕರ್ತರು ತೀವ್ರ ಬೇಸರಗೊಂಡಿದ್ದಾರೆ. ಕೆಲವರ ಸ್ವಾರ್ಥದಿಂದಾಗಿ ಈಗ ಎಲ್ಲ 63 ಶಾಸಕರನ್ನೂ ಅನುಮಾನದಿಂದ ನೋಡುವಂತಾಗಿದೆ. ಈ ಬಗ್ಗೆ ಈಗಾಗಲೇ ರಾಷ್ಟ್ರೀಯ ಅಧ್ಯಕ್ಷ ನಿತಿನ್ ನಬಿನ್ ಅವರಿಗೆ ಮಾಹಿತಿ ನೀಡಿದ್ದೇನೆ. ನಾನು ಮತ್ತು ವಿರೋಧ ಪಕ್ಷದ ನಾಯಕ ಆರ್. ಅಶೋಕ್ ದೆಹಲಿಗೆ ತೆರಳುತ್ತಿದ್ದು, ಹೈಕಮಾಂಡ್ ಭೇಟಿ ಬಳಿಕ ಧರ್ಮಸ್ಥಳದಲ್ಲಿ ಶಾಸಕಾಂಗ ಪಕ್ಷದ ಸಭೆ ಕರೆಯುವ ಕುರಿತು ಚರ್ಚಿಸಲಾಗುವುದು ಎಂದು ವಿಜಯೇಂದ್ರ ಹೇಳಿದ್ದಾರೆ.
ಬಿಜೆಪಿ ನಾಯಕರು ಕೊನೆಯ ಕ್ಷಣದಲ್ಲಿ ತಮ್ಮ ಮೊದಲ ಪ್ರಾಶಸ್ತ್ಯದ ಅಭ್ಯರ್ಥಿಗೆ 30 ಮತಗಳನ್ನು ನಿಗದಿಪಡಿಸಿದ್ದರಿಂದ ಬಿಜೆಪಿಯ ಇಬ್ಬರು ಅಭ್ಯರ್ಥಿಗಳ ಪೈಕಿ ಒಬ್ಬರು ಕೊನೆ ಕ್ಷಣದಲ್ಲಿ ಬಚಾವಾಗಿದ್ದಾರೆ. ಇಲ್ಲದಿದ್ದರೆ ಬಿಜೆಪಿಗೆ ಮತ್ತಷ್ಟು ದೊಡ್ಡ ಮುಖಭಂಗ ಕಾದಿತ್ತು ಎನ್ನಲಾಗಿದೆ.
ತನಿಖೆಗೆ ಸತ್ಯಶೋಧನಾ ಸಮಿತಿ ರಚನೆ
ಒಂದೆಡೆ ಧರ್ಮಸ್ಥಳದಲ್ಲಿ ದೇವರ ಮುಂದೆ ಆಣೆ ಮಾಡಿಸುವ ಪ್ರಕ್ರಿಯೆ ನಡೆಯುತ್ತಿದ್ದರೆ, ಇನ್ನೊಂದೆಡೆ ತಾಂತ್ರಿಕ ಮತ್ತು ರಾಜಕೀಯವಾಗಿ ಸತ್ಯಾಸತ್ಯತೆ ತಿಳಿಯಲು ಬಿಜೆಪಿ ವಿಧಾನ ಪರಿಷತ್ ಸದಸ್ಯ ಸಿ.ಟಿ. ರವಿ ನೇತೃತ್ವದಲ್ಲಿ ಸತ್ಯಶೋಧನಾ ಸಮಿತಿ ರಚಿಸಲಾಗಿದೆ. ಈ ಸಮಿತಿಯು ಶಾಸಕರ ವೋಟಿಂಗ್ ಪ್ಯಾಟರ್ನ್ ಹಾಗೂ ಇಂಟರ್ನಲ್ ರಿಪೋರ್ಟ್ ಆಧರಿಸಿ ಜೂನ್ 25 ರೊಳಗೆ ವರದಿ ನೀಡುವಂತೆ ಸೂಚಿಸಲಾಗಿದೆ.
ಕಠಿಣ ಕ್ರಮದ ಎಚ್ಚರಿಕೆ
ಪಕ್ಷದ ವಿಪ್ ಉಲ್ಲಂಘಿಸಿ, ಮೈತ್ರಿ ಧರ್ಮಕ್ಕೆ ದ್ರೋಹ ಬಗೆದವರನ್ನು ಯಾವುದೇ ಕಾರಣಕ್ಕೂ ಕ್ಷಮಿಸುವ ಪ್ರಶ್ನೆಯೇ ಇಲ್ಲ ಎಂದು ವಿಪಕ್ಷ ನಾಯಕ ಆರ್. ಅಶೋಕ್ ಹಾಗೂ ಬಿ.ವೈ. ವಿಜಯೇಂದ್ರ ಎಚ್ಚರಿಸಿದ್ದಾರೆ. ಸದ್ಯಕ್ಕೆ ದೆಹಲಿ ನಾಯಕರ ಭೇಟಿಯ ನಂತರ ಧರ್ಮಸ್ಥಳದ ಸಭೆಯ ಅಧಿಕೃತ ದಿನಾಂಕ ಪ್ರಕಟವಾಗಲಿದ್ದು, ಮಂಜುನಾಥ ಸ್ವಾಮಿಯ ಸನ್ನಿಧಿಯಲ್ಲಿ ಯಾವ ಶಾಸಕರು ಸಿಕ್ಕಿಬೀಳಲಿದ್ದಾರೆ ಎಂಬುದನ್ನು ಕಾದುನೋಡಬೇಕಿದೆ.

