ಮಸೀದಿ ಬಳಿ ಪಟಾಕಿ ಸಿಡಿಸಿದ್ದಕ್ಕೆ ಗಲಾಟೆ- ರೈತನ ಕೈ ಕಟ್, 26 ಜನರ ವಿರುದ್ಧ FIR
x

ಮಸೀದಿ ಬಳಿ ಪಟಾಕಿ ಸಿಡಿಸಿದ್ದಕ್ಕೆ ಗಲಾಟೆ- ರೈತನ ಕೈ ಕಟ್, 26 ಜನರ ವಿರುದ್ಧ FIR

ಹಾವೇರಿ ಜಿಲ್ಲೆಯ ನರೇಗಲ್ ಗ್ರಾಮದಲ್ಲಿ ಕಾರಹುಣ್ಣಿಮೆ ಹೋರಿ ಓಡಿಸುವ ವೇಳೆ ಪಟಾಕಿ ಸಿಡಿಸಿದ ವಿಚಾರಕ್ಕೆ ಎರಡು ಕೋಮಿನವರ ನಡುವೆ ಘರ್ಷಣೆ ನಡೆದಿದೆ. 8 ಮಂದಿ ಗಾಯಗೊಂಡಿದ್ದು, ಮೂವರ ಸ್ಥಿತಿ ಗಂಭೀರವಾಗಿದೆ.


Click the Play button to hear this message in audio format

ಹಾವೇರಿ ಜಿಲ್ಲೆಯ ಹಾನಗಲ್ ತಾಲೂಕಿನ ನರೇಗಲ್ ಗ್ರಾಮದಲ್ಲಿ ಕಾರಹುಣ್ಣಿಮೆ ಹಬ್ಬದ ಅಂಗವಾಗಿ ನಡೆದ ಹೋರಿ ಓಡಿಸುವ ಕಾರ್ಯಕ್ರಮ ಹಿಂಸಾಚಾರಕ್ಕೆ ತಿರುಗಿದೆ. ಮಸೀದಿ ಬಳಿ ಪಟಾಕಿ ಸಿಡಿಸಿದ ವಿಚಾರಕ್ಕೆ ಎರಡು ಕೋಮಿನವರ ನಡುವೆ ಮಾತಿನ ಚಕಮಕಿ ಆರಂಭವಾಗಿ, ಬಳಿಕ ಮಾರಾಮಾರಿಯಾಗಿ ತಿರುಗಿದೆ. ಈ ಘಟನೆಯಲ್ಲಿ ಒಟ್ಟು 8 ಮಂದಿ ಗಾಯಗೊಂಡಿದ್ದು, ಮೂವರ ಸ್ಥಿತಿ ಗಂಭೀರವಾಗಿದೆ.

ಮಸೀದಿ ಬಳಿ ಪಟಾಕಿ ಸಿಡಿಸಿದ್ದಕ್ಕೆ ಆಕ್ಷೇಪ

ಪ್ರತಿ ವರ್ಷದಂತೆ ಜೂನ್ 30ರಂದು ನರೇಗಲ್ ಗ್ರಾಮದಲ್ಲಿ ಕಾರಹುಣ್ಣಿಮೆ ಅಂಗವಾಗಿ ಹೋರಿ ಓಡಿಸುವ ಸ್ಪರ್ಧೆ ಆಯೋಜಿಸಲಾಗಿತ್ತು. ಈ ವೇಳೆ ರೈತರು ಎತ್ತುಗಳನ್ನು ಓಡಿಸುವ ಸಂದರ್ಭದಲ್ಲಿ ಗ್ರಾಮದ ಮಸೀದಿ ಸಮೀಪ ಪಟಾಕಿ ಸಿಡಿಸಿದ್ದಾರೆ ಎನ್ನಲಾಗಿದೆ. ಇದಕ್ಕೆ ಬಾಷಾಸಾಬ ಗೌಂಡಿ ಎಂಬುವರು ಆಕ್ಷೇಪ ವ್ಯಕ್ತಪಡಿಸಿ, "ಮಸೀದಿ ಬಳಿ ಪಟಾಕಿ ಏಕೆ ಸಿಡಿಸುತ್ತೀರಿ?" ಎಂದು ಪ್ರಶ್ನಿಸಿದ್ದರಿಂದ ಪರಿಸ್ಥಿತಿ ಉದ್ವಿಗ್ನಗೊಂಡಿದೆ ಎಂದು ತಿಳಿದುಬಂದಿದೆ.

ಮಾರಾಮಾರಿಗೆ ತಿರುಗಿದ ಮಾತಿನ ಚಕಮಕಿ

ಪಟಾಕಿ ವಿಚಾರವಾಗಿ ಆರಂಭವಾದ ಮಾತಿನ ಚಕಮಕಿ ಕೆಲವೇ ಕ್ಷಣಗಳಲ್ಲಿ ಎರಡು ಕೋಮಿನವರ ನಡುವೆ ಘರ್ಷಣೆಯಾಗಿ ಮಾರ್ಪಟ್ಟಿದೆ. ಹೋರಿ ಹಿಂದೆ ಬರುತ್ತಿದ್ದ ಲೋಹಿತ್ ಜಯಪ್ಪ ಎಂಬುವರ ಮೇಲೆ ಹಲ್ಲೆ ನಡೆದಿರುವ ಆರೋಪ ಕೇಳಿಬಂದಿದೆ. ಇದರಿಂದ ಉದ್ವಿಗ್ನಗೊಂಡ ಮತ್ತೊಂದು ಗುಂಪು ಕುಡುಗೋಲು ಸೇರಿದಂತೆ ವಿವಿಧ ಆಯುಧಗಳಿಂದ ಪ್ರತಿದಾಳಿ ನಡೆಸಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ಈ ಗಲಾಟೆಯಲ್ಲಿ ಓರ್ವ ರೈತನ ಕೈ ಕತ್ತರಿಸಿರುವ ಆರೋಪವೂ ಕೇಳಿಬಂದಿದ್ದು, ಗಾಯಾಳುವಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಇನ್ನು ಇಬ್ಬರನ್ನು ಹೆಚ್ಚಿನ ಚಿಕಿತ್ಸೆಗಾಗಿ ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಇಬ್ಬರಿಗೆ ಕೈಗೆ ಗಂಭೀರ ಗಾಯಗಳಾಗಿದ್ದು, ಉಳಿದವರು ಹಾವೇರಿ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಗ್ರಾಮದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್

ಘಟನೆ ಬಳಿಕ ನರೇಗಲ್ ಗ್ರಾಮದಲ್ಲಿ ಉದ್ವಿಗ್ನ ವಾತಾವರಣ ನಿರ್ಮಾಣವಾಗಿದ್ದು, ಯಾವುದೇ ಅಹಿತಕರ ಘಟನೆ ನಡೆಯದಂತೆ ಪೊಲೀಸ್ ಇಲಾಖೆ ಬಿಗಿ ಭದ್ರತೆ ನಿಯೋಜಿಸಿದೆ.

26 ಜನರ ವಿರುದ್ಧ FIR

ಪ್ರಕರಣಕ್ಕೆ ಸಂಬಂಧಿಸಿದಂತೆ ಆಡೂರು ಪೊಲೀಸ್ ಠಾಣೆಯಲ್ಲಿ 26 ಜನರ ವಿರುದ್ಧ ಎಫ್‌ಐಆರ್ ದಾಖಲಾಗಿದೆ. ಹರೀಶ್ ತಂದೆ ರಾಮಪ್ಪ ನೀಡಿದ ದೂರಿನ ಆಧಾರದ ಮೇಲೆ ಪೊಲೀಸರು ಪ್ರಕರಣ ದಾಖಲಿಸಿದ್ದು, ಖ್ವಾಜಾ, ಭಾಷಾಸಾಬ, ಮೆಹಬೂಬ್ ಅಲಿ, ಮಹಬೂಬಸಾಬ ಸೇರಿದಂತೆ ಒಟ್ಟು 26 ಜನರನ್ನು ಆರೋಪಿಗಳನ್ನಾಗಿ ಹೆಸರಿಸಲಾಗಿದೆ. ಪ್ರಕರಣ ಸಂಖ್ಯೆ 109/2026 ಅಡಿ BNS ಸೆಕ್ಷನ್ 189(2), 191(2) ಸೇರಿದಂತೆ ವಿವಿಧ ಕಲಂಗಳಡಿ ಪ್ರಕರಣ ದಾಖಲಿಸಿ ತನಿಖೆ ಮುಂದುವರಿಸಲಾಗಿದೆ.

ತನಿಖೆ ಮುಂದುವರಿಕೆ

ಪೊಲೀಸರು ಘಟನೆಯ ನಿಖರ ಕಾರಣ, ಘರ್ಷಣೆಗೆ ಕಾರಣವಾದ ಬೆಳವಣಿಗೆಗಳು ಹಾಗೂ ಹಲ್ಲೆಯಲ್ಲಿ ಭಾಗಿಯಾಗಿದ್ದವರ ಪಾತ್ರದ ಬಗ್ಗೆ ತನಿಖೆ ನಡೆಸುತ್ತಿದ್ದಾರೆ. ಸದ್ಯ ಗ್ರಾಮದಲ್ಲಿ ಪರಿಸ್ಥಿತಿ ನಿಯಂತ್ರಣದಲ್ಲಿದ್ದು, ಶಾಂತಿ ಕಾಪಾಡುವಂತೆ ಪೊಲೀಸ್ ಇಲಾಖೆ ಸಾರ್ವಜನಿಕರಿಗೆ ಮನವಿ ಮಾಡಿದೆ.

Read More
Next Story