
ಪ್ರಸ್ತುತ ರಾಜ್ಯ ಸರ್ಕಾರ ಪ್ರತಿ ತಿಂಗಳು ಸುಮಾರು 82 ಲಕ್ಷಕ್ಕೂ ಹೆಚ್ಚು ಫಲಾನುಭವಿಗಳಿಗೆ ಪಿಂಚಣಿ ವಿತರಣೆಗಾಗಿ ಸುಮಾರು 400 ಕೋಟಿ ರೂಪಾಯಿ ವೆಚ್ಚ ಮಾಡುತ್ತಿದೆ.
ರಾಜ್ಯದಲ್ಲಿ 16 ಲಕ್ಷ ಜನರ ಪಿಂಚಣಿ ಸ್ಥಗಿತ? ಗೃಹಲಕ್ಷ್ಮಿ, ಗೃಹಜ್ಯೋತಿ ಪರಿಷ್ಕರಣೆ ನಡುವೆ ಮತ್ತೊಂದು ಶಾಕ್!
ಕರ್ನಾಟಕದಲ್ಲಿ ಸುಮಾರು 16 ಲಕ್ಷ ಜನರಿಗೆ ಕಳೆದ ಮೂರು ತಿಂಗಳಿಂದ ಪಿಂಚಣಿ ಹಣ ತಲುಪಿಲ್ಲ ಎಂಬ ಆರೋಪ ಕೇಳಿಬಂದಿದೆ. ವೃದ್ಧಾಪ್ಯ ವೇತನ, ವಿಧವಾ ಪಿಂಚಣಿ ಹಾಗೂ ಇತರೆ ಸಾಮಾಜಿಕ ಭದ್ರತಾ ಯೋಜನೆಗಳ ಫಲಾನುಭವಿಗಳು ಸಂಕಷ್ಟಕ್ಕೆ ಸಿಲುಕಿದ್ದಾರೆ.
ರಾಜ್ಯ ಸರ್ಕಾರ ಗೃಹಲಕ್ಷ್ಮಿ ಹಾಗೂ ಗೃಹಜ್ಯೋತಿ ಯೋಜನೆಗಳಲ್ಲಿ ಪರಿಷ್ಕರಣೆ ಕೈಗೊಂಡಿರುವ ಬೆನ್ನಲ್ಲೇ ಇದೀಗ ಪಿಂಚಣಿ ಯೋಜನೆಗಳ ಕುರಿತು ಹೊಸ ವಿವಾದ ಶುರುವಾಗಿದೆ. ಕಳೆದ ಮೂರು ತಿಂಗಳಿಂದ ರಾಜ್ಯದ ಲಕ್ಷಾಂತರ ಫಲಾನುಭವಿಗಳಿಗೆ ಪಿಂಚಣಿ ಹಣ ಜಮೆಯಾಗಿಲ್ಲ ಎಂಬ ಆರೋಪ ಕೇಳಿಬಂದಿದ್ದು, ವೃದ್ಧರು ಹಾಗೂ ಇತರೆ ಫಲಾನುಭವಿಗಳು ಸಂಕಷ್ಟಕ್ಕೆ ಸಿಲುಕಿದ್ದಾರೆ.
ಮಾಹಿತಿಗಳ ಪ್ರಕಾರ, ರಾಜ್ಯದಲ್ಲಿ ಒಟ್ಟು 82.71 ಲಕ್ಷ ಮಂದಿ ವಿವಿಧ ಸಾಮಾಜಿಕ ಭದ್ರತಾ ಪಿಂಚಣಿ ಯೋಜನೆಗಳ ಫಲಾನುಭವಿಗಳಾಗಿದ್ದಾರೆ. ಆದರೆ ಈ ಪೈಕಿ ಸುಮಾರು 16 ಲಕ್ಷ ಮಂದಿಗೆ ಕಳೆದ ಮೂರು ತಿಂಗಳಿಂದ ಪಿಂಚಣಿ ಹಣ ತಲುಪಿಲ್ಲ ಎನ್ನಲಾಗಿದೆ. ಇದರಿಂದ ಸರ್ಕಾರ ಫಲಾನುಭವಿಗಳನ್ನು ಪಟ್ಟಿಯಿಂದ ಕೈಬಿಟ್ಟಿದೆಯೇ ಎಂಬ ಪ್ರಶ್ನೆಗಳು ಉದ್ಭವಿಸಿವೆ.
ಯಾವ ಯೋಜನೆಗಳ ಫಲಾನುಭವಿಗಳಿಗೆ ತೊಂದರೆ?
ವೃದ್ಧಾಪ್ಯ ವೇತನ, ವಿಧವಾ ಪಿಂಚಣಿ, ಸಂಧ್ಯಾ ಸುರಕ್ಷಾ ಯೋಜನೆ ಹಾಗೂ ಅಂಗವಿಕಲರಿಗೆ ನೀಡಲಾಗುವ ಪಿಂಚಣಿ ಯೋಜನೆಗಳ ಫಲಾನುಭವಿಗಳಿಗೂ ಹಣ ಜಮೆಯಾಗದಿರುವ ಬಗ್ಗೆ ದೂರುಗಳು ಕೇಳಿಬಂದಿವೆ.
ಪಿಂಚಣಿ ಹಣದ ಮೇಲೆ ಅವಲಂಬಿತರಾಗಿರುವ ಅನೇಕ ವೃದ್ಧರು ಹಾಗೂ ಆರ್ಥಿಕವಾಗಿ ದುರ್ಬಲ ವರ್ಗದ ಜನರು ಕಳೆದ ಮೂರು ತಿಂಗಳಿಂದ ಕಚೇರಿಯಿಂದ ಕಚೇರಿಗೆ ಅಲೆದಾಡುವ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ಆರೋಪಿಸಲಾಗಿದೆ.
ವೃದ್ಧರ ಸಂಕಷ್ಟ ಹೆಚ್ಚಳ
ಅನೇಕ ವೃದ್ಧರಿಗೆ ಪಿಂಚಣಿ ಹಣವೇ ಮನೆ ಖರ್ಚು, ಔಷಧಿ ಖರೀದಿ ಹಾಗೂ ದೈನಂದಿನ ಅಗತ್ಯಗಳನ್ನು ಪೂರೈಸುವ ಪ್ರಮುಖ ಆಧಾರವಾಗಿದೆ. ಆದರೆ ಹಣ ಜಮೆಯಾಗದಿರುವುದರಿಂದ ಅವರು ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ್ದಾರೆ ಎನ್ನಲಾಗಿದೆ.
ಸರ್ಕಾರದ ಉಳಿತಾಯ ಪ್ರಯತ್ನವೇ?
ಪ್ರಸ್ತುತ ರಾಜ್ಯ ಸರ್ಕಾರ ಪ್ರತಿ ತಿಂಗಳು ಸುಮಾರು 82 ಲಕ್ಷಕ್ಕೂ ಹೆಚ್ಚು ಫಲಾನುಭವಿಗಳಿಗೆ ಪಿಂಚಣಿ ವಿತರಣೆಗಾಗಿ ಸುಮಾರು 400 ಕೋಟಿ ರೂಪಾಯಿ ವೆಚ್ಚ ಮಾಡುತ್ತಿದೆ. ಇದೀಗ 16 ಲಕ್ಷ ಫಲಾನುಭವಿಗಳಿಗೆ ಪಿಂಚಣಿ ಸ್ಥಗಿತಗೊಳಿಸಿರುವ ಮೂಲಕ ಸರ್ಕಾರ ತಿಂಗಳಿಗೆ ಸುಮಾರು 150 ಕೋಟಿ ರೂಪಾಯಿ ಉಳಿತಾಯ ಮಾಡಲು ಮುಂದಾಗಿದೆ ಎಂಬ ಆರೋಪವೂ ಕೇಳಿಬಂದಿದೆ.
ಆದರೆ ಈ ಕುರಿತು ಸರ್ಕಾರದಿಂದ ಇನ್ನೂ ಅಧಿಕೃತ ಸ್ಪಷ್ಟನೆ ಹೊರಬಂದಿಲ್ಲ. ಪಿಂಚಣಿ ಸ್ಥಗಿತದ ಹಿಂದಿನ ನಿಖರ ಕಾರಣವೇನು, ತಾಂತ್ರಿಕ ಸಮಸ್ಯೆಯೇ ಅಥವಾ ಫಲಾನುಭವಿಗಳ ಮರುಪರಿಶೀಲನೆ ಪ್ರಕ್ರಿಯೆಯ ಭಾಗವೇ ಎಂಬುದು ಮುಂದಿನ ದಿನಗಳಲ್ಲಿ ಸ್ಪಷ್ಟವಾಗಬೇಕಿದೆ.

