
ಸಿಎಂ ಸಿದ್ದರಾಮಯ್ಯ
ತೆರಿಗೆ ಹಂಚಿಕೆಯಲ್ಲಿ ಕರ್ನಾಟಕಕ್ಕೆ ಅನ್ಯಾಯ: 16ನೇ ಹಣಕಾಸು ಆಯೋಗಕ್ಕೆ ಸಿಎಂ ಸುದೀರ್ಘ ಪತ್ರ
ಬೆಂಗಳೂರಿನ ಮೂಲ ಸೌಕರ್ಯ ಅಭಿವೃದ್ಧಿಗೆ ಮುಂದಿನ 5 ವರ್ಷಗಳಲ್ಲಿ 1.15 ಲಕ್ಷ ಕೋಟಿ ರೂ. ಗಳಷ್ಟು ಹೂಡಿಕೆ ಅಗತ್ಯವಿದೆ. ಇದಕ್ಕಾಗಿ ಕನಿಷ್ಠ 27,793 ಕೋಟಿ ರೂ. ಗಳನ್ನಾದರೂ ನೀಡುವಂತೆ ಶಿಫಾರಸು ಮಾಡಬೇಕು ಎಂದು ಸಿಎಂ ಸಿದ್ದರಾಮಯ್ಯ ಮನವಿ ಮಾಡಿದ್ದಾರೆ.
ಕೇಂದ್ರ ಸರ್ಕಾರ ಜಿಎಸ್ಟಿ ಬಾಕಿ ಸೇರಿದಂತೆ ಅನುದಾನ ನೀಡುವಲ್ಲಿ ತಾರತಮ್ಯ ಮಾಡುತ್ತಿದೆ ಎಂದು ಆರೋಪಿಸುವ ಸಿಎಂ ಸಿದ್ದರಾಮಯ್ಯ 16ನೇ ಹಣಕಾಸು ಆಯೋಗ ಪತ್ರ ಬರೆಯುವ ಮೂಲಕ ರಾಜ್ಯದ ಬೇಡಿಕೆಗಳೇನು ಎಂಬುದರ ಬಗ್ಗೆ ವಿವರಿಸುವುದರೊಂದಿಗೆ ಕೇಂದ್ರ ಹಾಗೂ ರಾಜ್ಯಗಳ ನಡುವಿನ ಒಕ್ಕೂಟ ವ್ಯವಸ್ಥೆ ಸದೃಢವಾಗಿರಬೇಕು ಎಂದು ಮನವಿ ಮಾಡಿದ್ದಾರೆ.
ಜಿಎಸ್ಟಿ ಪಾಲು, ಪ್ರಾಕೃತಿಕ ವಿಕೋಪ ಪರಿಹಾರ ನಿಧಿ, ವಿಶೇಷ ಅನುದಾನ ನೀಡುವುದು ಸೇರಿದಂತೆ ಹಣಕಾಸಿನ ಸಮಾನ ಹಂಚಿಕೆಯನ್ನು ನ್ಯಾಯ ಸಮ್ಮತ ಹಾಗೂ ಸಂವಿಧಾನತ್ಮಕವಾಗಿ ನೀಡಬೇಕು. ಇದು ಸಮಸ್ತ ಕರ್ನಾಟಕದ ಒತ್ತಾಯವಾಗಿದ ಎಂದು ಪತ್ರದಲ್ಲಿ ತಿಳಿಸಿದ್ದಾರೆ.
ಪತ್ರದಲ್ಲೇನಿದೆ ?
ಕರ್ನಾಟಕದ ಆರ್ಥಿಕ ಸ್ಥಿತಿಯನ್ನು ನೋಡಿದರೆ, 14ನೇ ಹಣಕಾಸು ಆಯೋಗಕ್ಕೆ ಹೋಲಿಸಿದರೆ 15ನೇ ಹಣಕಾಸು ಆಯೋಗದ ವರದಿಯಿಂದಾಗಿ ಶೇ. 23ರಷ್ಟು ತೆರಿಗೆ ಪಾಲು ನೇರವಾಗಿ ಕಡಿಮೆಯಾಗಿದೆ. ಕೆಲವು ಆರ್ಥಿಕ ಅಜ್ಞಾನಿಗಳು ಈ ಸಂಗತಿಯನ್ನು ಅರ್ಥ ಮಾಡಿಕೊಳ್ಳದೆ ವಿತಂಡವಾದ ಮಾಡುತ್ತಾರೆ. 14ನೇ ಹಣಕಾಸು ಆಯೋಗವು ಶೇ. 4.71ರಷ್ಟು ಪಾಲನ್ನು ನಮಗೆ ಒದಗಿಸಿತ್ತು. 15ನೇ ಹಣಕಾಸು ಆಯೋಗವು ಇದನ್ನು ಶೇ. 3.64ಕ್ಕೆ ಇಳಿಸುವ ಮೂಲಕ ಘೋರ ಅನ್ಯಾಯ ಮಾಡಿತು. ಉದಾಹರಣೆಗೆ, ರಾಜ್ಯಗಳಿಗೆ ಹಂಚಿಕೆ ಮಾಡುವ 100 ರೂ. ರಲ್ಲಿ ಮೊದಲು ಕರ್ನಾಟಕಕ್ಕೆ 4.71 ರೂ. ಸಿಗುತ್ತಿದ್ದರೆ 15ನೇ ಆಯೋಗವು ಅದನ್ನು 3.64 ರೂ.ಗೆ ಇಳಿಸಿತು. ಇದರಿಂದ ರಾಜ್ಯಕ್ಕೆ ನೇರವಾಗಿ ಸುಮಾರು 80 ಸಾವಿರ ಕೋಟಿ ರೂ. ಬೃಹತ್ ಪ್ರಮಾಣದ ತೆರಿಗೆ ಪಾಲು ಸಿಗದೆ ಅನ್ಯಾಯವಾಯಿತು.
ಶೇ.4.7 ಕ್ಕಿಂತ ಹೆಚ್ಚಿನ ಪಾಲು ನೀಡಿ
ದೇಶದ ಆರ್ಥಿಕ ಶಕ್ತಿಯಲ್ಲಿ ಚಾಲಕ ಸ್ಥಾನದಲ್ಲಿರುವ ಕರ್ನಾಟಕ ತಲಾವಾರು ಆರ್ಥಿಕ ಉತ್ಪಾದಕತೆಯಲ್ಲಿ ಮೊದಲ ಸ್ಥಾನದಲ್ಲಿದೆ. ತೆರಿಗೆ, ಸೆಸ್ ಮುಂತಾದ ರೂಪದಲ್ಲಿ ಕೇಂದ್ರ ಸರ್ಕಾರವು ಕರ್ನಾಟಕದಿಂದ 4.5 ಲಕ್ಷ ಕೋಟಿ ರೂ. ನಿಂದ 5 ಲಕ್ಷ ಕೋಟಿ ರೂ. ಗಳಷ್ಟು ಸಂಗ್ರಹಿಸುತ್ತದೆ. ರಾಜ್ಯದ ಒಟ್ಟಾರೆ ಆಯವ್ಯಯದಲ್ಲಿ ಇಡೀ ದೇಶದಲ್ಲಿಯೇ ಕೇಂದ್ರದಿಂದ ಅತ್ಯಂತ ಕಡಿಮೆ ತೆರಿಗೆ ಪಾಲು ಮತ್ತು ಅನುದಾನ ಪಡೆಯುವ ರಾಜ್ಯವೂ ಕರ್ನಾಟಕವೇ ಆಗಿರುವುದು ದುರದೃಷ್ಟಕರ. ಈ ಹಿನ್ನೆಲೆಯಲ್ಲಿ ನಮಗೆ 14ನೇ ಹಣಕಾಸು ಆಯೋಗವು ನೀಡಿದ್ದ ಶೇ. 4.71ರಷ್ಟು ಪಾಲನ್ನು ಕೊಟ್ಟರೆ ಮಾತ್ರ ನಾವು ನಿಟ್ಟುಸಿರು ಬಿಡುವಂತಾಗುತ್ತದೆ. ಅದಕ್ಕಿಂತ ಹೆಚ್ಚು ಕೊಟ್ಟರೆ ಮಾತ್ರ ನೈಜವಾಗಿ ನ್ಯಾಯ ಸಿಕ್ಕಂತಾಗುತ್ತದೆ.
ತಲಾದಾಯ ಹೆಚ್ಚಾದ್ದರಿಂದ ಕಡಿಮೆ ಪಾಲು
ರಾಜ್ಯಕ್ಕೆ 15ನೇ ಹಣಕಾಸು ಆಯೋಗದಲ್ಲಿ ಸಮಸ್ಯೆಯಾಗಲು ಆಯೋಗವು ಅಳವಡಿಸಿಕೊಂಡ ಸೂತ್ರಗಳಲ್ಲಿಯೇ ದೋಷಗಳಿದ್ದವು. ಆದಾಯ ದೂರ ಅಥವಾ ಇನ್ಕಂ ಡಿಸ್ಟೆನ್ಸ್ ಎಂಬ ಸೂತ್ರಕ್ಕೆ ಶೇ. 45ರಷ್ಟು ಪ್ರಾಮುಖ್ಯ ನೀಡಿದ್ದು ಮುಖ್ಯ ಕಾರಣ. ಕರ್ನಾಟಕದ ಜನರ ತಲಾ ಆದಾಯ ಹೆಚ್ಚಿದೆಯೆಂದು ನಮಗೆ ಕಡಿಮೆ ಪಾಲನ್ನು ಹಂಚಿಕೆ ಮಾಡಲಾಯಿತು. ತಲಾ ಆದಾಯ ಎನ್ನುವುದು ಆರ್ಥಿಕತೆಯನ್ನು ಅಳೆಯುವ ಮಾನದಂಡಗಳಲ್ಲೊಂದಷ್ಟೆ, ಅದೇ ಮುಖ್ಯವಲ್ಲ. ರಾಜ್ಯದ ಉತ್ಪನ್ನವನ್ನು ಶ್ರೀಮಂತರು ಮತ್ತು ಬಡವರನ್ನೆಲ್ಲ ಒಂದೇ ಗುಂಪಿಗೆ ಸೇರಿಸಿ ಎಲ್ಲರಿಗೂ ಸಮಾನವಾಗಿ ವಿಭಾಗಿಸಲಾಗುತ್ತದೆ. ಇದರಿಂದ ಬರುವ ಮೊತ್ತವನ್ನು ತಲಾ ಆದಾಯ ಎನ್ನಲಾಗುತ್ತದೆ.
ಕಲ್ಯಾಣ ಕರ್ನಾಟಕದ ತಲಾದಾಯ ಕಡಿಮೆ
2014ರಿಂದ ಈಚೆಗೆ ಆಡಳಿತ ನಡೆಸುತ್ತಿರುವ ಕೇಂದ್ರ ಸರ್ಕಾರವು ಅಳವಡಿಸಿಕೊಂಡ ನೀತಿಗಳಿಂದಾಗಿ ಸಂಪತ್ತು ಕೆಲವೇ ಜನರ ಬಳಿ ಕೇಂದ್ರೀಕೃತವಾಗುತ್ತಿದೆ. ಜಾಗತಿಕ ಅಸಮಾನತಾ ಸೂಚ್ಯಂಕದ ಅಧ್ಯಯನಗಳ ಪ್ರಕಾರ, ಶೇ. 50ರಷ್ಟಿರುವ ಬಡ ಜನರು ಕೇವಲ ಶೇ. 15ರಷ್ಟು ಆದಾಯ ಗಳಿಸುತ್ತಿದ್ದಾರೆ. ಶೇ. 10ರಷ್ಟಿರುವ ಶ್ರೀಮಂತರು ಶೇ. 58ಕ್ಕೂ ಹೆಚ್ಚಿನ ಆದಾಯ ಗಳಿಸುತ್ತಿದ್ದಾರೆ. ಈ ಎಲ್ಲರನ್ನೂ ಒಂದೇ ತಕ್ಕಡಿಯಲ್ಲಿಟ್ಟು ಅಳತೆ ಮಾಡಿ ಅದನ್ನು ಆದಾಯ ದೂರ ಎಂಬ ಸೂತ್ರಕ್ಕೆ ತಂದು ಅನುದಾನಗಳನ್ನು ಖೋತಾ ಮಾಡುವುದು ಅನ್ಯಾಯವಾಗುತ್ತದೆ ಎಂದು ಹೇಳಿದ್ದೇವೆ. ಕಲ್ಯಾಣ ಕರ್ನಾಟಕವೂ ಸೇರಿದಂತೆ ಕೆಲವು ಜಿಲ್ಲೆಗಳ ತಲಾ ಆದಾಯ ದೇಶದ ಸರಾಸರಿ ತಲಾ ಆದಾಯಕ್ಕಿಂತ ಕಡಿಮೆ ಇದೆ ಎಂಬುದನ್ನು 16ನೇ ಹಣಕಾಸು ಆಯೋಗಕ್ಕೆ ಮನವರಿಕೆ ಮಾಡಿಕೊಡಲಾಗಿದೆ. ಆದ್ದರಿಂದ ಈ ಸೂತ್ರವನ್ನು ಶೇ. 45ರ ಬದಲು ಶೇ. 25ಕ್ಕೆ ಇಳಿಸಬೇಕು.
ಉತ್ತಮ ಕಾನೂನು ಸುವ್ಯವಸ್ಥೆಯಿಂದ ಐಟಿ ಕ್ರಾಂತಿ
15ನೇ ಹಣಕಾಸು ಆಯೋಗವು ಜಿಎಸ್ಡಿಪಿಯನ್ನು ಲೆಕ್ಕ ಹಾಕುವಾಗ ಅಳವಡಿಸಿಕೊಂಡಿದ್ದ ಮೂಲ ವರ್ಷ 2004 ಹಾಗೂ 05ರ ಬದಲು 2011 ಹಾಗೂ 12ಕ್ಕೆ ಬದಲಾಯಿಸಿದ್ದರಿಂದ ಕರ್ನಾಟಕಕ್ಕೆ ಭಾರಿ ನಷ್ಟವಾಯಿತು. 2004 ಹಾಗೂ 05ರಲ್ಲಿ ರಾಜ್ಯಗಳು ರಫ್ತಿನಲ್ಲಿ, ಉತ್ಪಾದನೆಯ ವಿಧಾನಗಳಲ್ಲಿ ತುಸು ಸಮೀಪವರ್ತಿಯಾಗಿದ್ದವು. ಐಟಿ ಕ್ರಾಂತಿ ಸಂಭವಿಸಿದ ನಂತರ ಕಾನೂನು ಸುವ್ಯವಸ್ಥೆ ಸೇರಿದಂತೆ ಯಾವ ರಾಜ್ಯವು ಅನುಕೂಲಕರವಾಗಿದೆಯೋ ಅಲ್ಲಿ ಐಟಿ ಕಂಪೆನಿಗಳು ನೆಲಸಿದವು. ಅವುಗಳಲ್ಲಿ ಬೆಂಗಳೂರು ಒಂದು.
ಐಟಿ ರಫ್ತಿನಿಂದ ಕೇಂದ್ರಕ್ಕೆ ಹಲವಾರು ಅನುಕೂಲಗಳಾಗುತ್ತಿವೆ. ನಮ್ಮಲ್ಲಿ ಖರೀದಿ ಸಾಮರ್ಥ್ಯ ಹಾಗೂ ಆರ್ಥಿಕ ಚಟುವಟಿಕೆಗಳು ಒಂದಿಷ್ಟು ಹೆಚ್ಚಾಗಬಹುದು. ಆದರೆ ಐಟಿ ರಫ್ತಿನ ಕಾರಣಕ್ಕೆ ನಮ್ಮ ಜಿಎಸ್ಡಿಪಿ ಹೆಚ್ಚು ಹಿಗ್ಗಿದಂತೆ ಕಾಣುತ್ತದೆ. ಮೂಲ ವರ್ಷ ಬದಲಾಯಿಸಿದ ಕಾರಣಕ್ಕೆ ಕರ್ನಾಟಕದ ಜಿಎಸ್ಡಿಪಿ ಬೆಳವಣಿಗೆ ದರ ಶೇ. 33ರಷ್ಟು ಹೆಚ್ಚಾಗಿರುವಂತೆ ಕಂಡು ಬಂದಿತು. ಇತರೆ ರಾಜ್ಯಗಳ ಸರಾಸರಿ ಏರಿಕೆ ಶೇ. 5.6ರಷ್ಟು ಎಂದು ಲೆಕ್ಕ ಹಾಕಿದ ಕಾರಣ ನಮಗೆ ಅನ್ಯಾಯವಾಗಿದೆ. ಹೀಗಾಗಿ ಈ ಮಾನದಂಡವನ್ನು ವಾಸ್ತವಿಕವಾಗಿ ಲೆಕ್ಕ ಹಾಕಿ ಸರಿಪಡಿಸಬೇಕು.
1971ರ ಜನಸಂಖ್ಯೆಯನ್ನೇ ಮಾನದಂಡವಾಗಿಸಿ
15ನೇ ಹಣಕಾಸು ಆಯೋಗವು ಜನಸಂಖ್ಯೆಯನ್ನು 1971ರ ಬದಲಾಗಿ 2011 ಅನ್ನು ಆಧಾರವಾಗಿರಿಸಿಕೊಂಡ ಕಾರಣದಿಂದಲೂ ನಮಗೆ ತೀವ್ರ ರೂಪದ ಅನ್ಯಾಯವಾಗಿದೆ. ಜನಸಂಖ್ಯಾ ನಿಯಂತ್ರಣದ ಮೂಲಕ ಅಭಿವೃದ್ಧಿ ಸಾಧಿಸುತ್ತಿರುವ ರಾಜ್ಯಗಳಿಗೆ ಇದರಿಂದ ದೊಡ್ಡ ಹೊಡೆತ ಬಿದ್ದಿತು. ಜನಸಂಖ್ಯಾ ನಿಯಂತ್ರಣ ಸಾಧಿಸಿದ ರಾಜ್ಯಗಳಿಗೆ ಉತ್ತೇಜನ ನೀಡುವ ಬದಲು ಘೋರ ಶಿಕ್ಷೆ ನೀಡಲಾಯಿತು. ಇದನ್ನು ಸರಿಪಡಿಸಬೇಕಾದರೆ 1971ರ ಜನಸಂಖ್ಯೆಯನ್ನೇ ಮಾನದಂಡವನ್ನಾಗಿ ಇಟ್ಟುಕೊಳ್ಳಬೇಕು ಹಾಗೂ ಜನಸಂಖ್ಯೆಗೆ ನಿಗದಿಪಡಿಸಿರುವ ಪ್ರಾಮುಖ್ಯವನ್ನು ವೈಜ್ಞಾನಿಕವಾಗಿ ಪರಿಗಣಿಸಬೇಕು.
ರಿಸ್ಕ್ ಫ್ಯಾಕ್ಟರ್ 15ಕ್ಕೇರಲಿ
ಪ್ರಕೃತಿ ವಿಕೋಪಗಳನ್ನು ನಿಭಾಯಿಸಲು ಎನ್ಡಿಆರ್ಎಫ್ ಮತ್ತು ಎಸ್ಡಿಆರ್ಎಫ್ ಅನುದಾನಗಳನ್ನು ವೈಜ್ಞಾನಿಕ ವಿಧಾನಗಳ ಮೂಲಕ ಲೆಕ್ಕ ಹಾಕಿ ಹಂಚಿಕೆ ಮಾಡಬೇಕು. 2014 ಹಾಗೂ 24ರ ಅವಧಿಯಲ್ಲಿ ರಾಜ್ಯವು ಪ್ರಕೃತಿ ವಿಕೋಪಗಳಿಂದಾಗಿ 1.56 ಲಕ್ಷ ಕೋಟಿ ರೂ. ಗಳಷ್ಟು ನಷ್ಟವನ್ನು ಅನುಭವಿಸಿದೆ. 2002ರಿಂದಲೂ ಅತಿವೃಷ್ಟಿ, ಬರ, ಪ್ರವಾಹಗಳಿಗೆ ರಾಜ್ಯವು ನಿರಂತರವಾಗಿ ಒಳಗಾಗುತ್ತಲೇ ಇದೆ. ಇಷ್ಟಿದ್ದರೂ ನಮಗೆ ಕೇವಲ 5 ರಿಸ್ಕ್ ಫ್ಯಾಕ್ಟರ್ ಅಂಕ ನೀಡುವ ಮೂಲಕ ವಂಚಿಸಲಾಗಿದೆ. ಇದನ್ನು 15ಕ್ಕೆ ಏರಿಸಬೇಕು.
ವಿಕೇಂದ್ರೀಕರಣದಲ್ಲಿ ಉತ್ತಮ ಸಾಧನೆ ಮಾಡಿದ ರಾಜ್ಯಗಳನ್ನು ಪ್ರೋತ್ಸಾಹಿಸಲು ಪಂಚಾಯತ್ ಅಧಿಕಾರ ಹಂಚಿಕೆ ಸೂಚ್ಯಂಕವನ್ನು ಅಳವಡಿಸಿಕೊಳ್ಳಬೇಕು. ಹಿಂದಿನ ಹಣಕಾಸು ಆಯೋಗಗಳು ಜನಸಂಖ್ಯೆಗೆ ಶೇ. 90 ಹಾಗೂ ವಿಸ್ತೀರ್ಣಕ್ಕೆ ಶೇ. 10ರಷ್ಟು ಮಾನದಂಡಗಳನ್ನು ಅಳವಡಿಸಿಕೊಂಡ ಕಾರಣ, ವಿಕೇಂದ್ರೀಕರಣ ಸಾಧಿಸಿದ ರಾಜ್ಯಗಳಿಗೆ ಅನ್ಯಾಯವಾಯಿತು. ಆದ್ದರಿಂದ ಜನಸಂಖ್ಯೆಗೆ ಶೇ. 60, ಭೌಗೋಳಿಕ ವಿಸ್ತೀರ್ಣಕ್ಕೆ ಶೇ. 20 ಮತ್ತು ಅಧಿಕಾರ ಹಂಚಿಕೆ ಸೂಚ್ಯಂಕಕ್ಕೆ ಶೇ. 20ರಷ್ಟು ಮಾನದಂಡಗಳನ್ನು ನಿಗದಿಪಡಿಸಬೇಕು.
ವಿಶೇಷ ಪ್ಯಾಕೇಜ್ ಅಗತ್ಯ
ರಾಜ್ಯ ಸರ್ಕಾರವು ಕಲ್ಯಾಣ ಕರ್ನಾಟಕಕ್ಕೆ 5 ವರ್ಷಗಳಲ್ಲಿ 25 ಸಾವಿರ ಕೋಟಿ ರೂ. ಗಳನ್ನು ಮೀಸಲಿರಿಸಿದೆ. ಇದರ ಜೊತೆಗೆ ಕೇಂದ್ರ ಸರ್ಕಾರವೂ ಅಷ್ಟೇ ಮೊತ್ತವನ್ನು ಮ್ಯಾಚಿಂಗ್ ಗ್ರ್ಯಾಂಟ್ ನೀಡಬೇಕು ಹಾಗೂ ಆ ಭಾಗದ ಪರಿಸರ ಸಂರಕ್ಷಣೆ ಮತ್ತು ವಿಪತ್ತು ನಿರ್ವಹಣೆಗಾಗಿ 10 ಸಾವಿರ ಕೋಟಿ ರೂ. ವಿಶೇಷ ಪ್ಯಾಕೇಜ್ ನೀಡಬೇಕು.
ಮಲೆನಾಡು, ಕರಾವಳಿ ಹಾಗೂ ಪಶ್ಚಿಮ ಘಟ್ಟಗಳು ಪರಿಸರ ಸೂಕ್ಷ್ಮ ವಲಯಗಳಾಗಿವೆ. ಅವು ಇಡೀ ಭಾರತದ ಆರೋಗ್ಯವನ್ನು ಕಾಪಾಡುವ ನಿಟ್ಟಿನಲ್ಲಿ ಬಹುದೊಡ್ಡ ಪಾತ್ರ ವಹಿಸುತ್ತಿವೆ. ಅಲ್ಲಿನ ಕೃಷಿಕರ ಬದುಕು ಸಂಕಷ್ಟದಲ್ಲಿದೆ. ಅದಕ್ಕಾಗಿ ವಿಶೇಷ ಅನುದಾನಗಳನ್ನು ಒದಗಿಸಬೇಕು. ಅಲ್ಲದೆ, ರಾಜಸ್ಥಾನದ ನಂತರ ಅತಿ ಹೆಚ್ಚು ಒಣ ಭೂಮಿ ಹೊಂದಿರುವ ರಾಜ್ಯ ಕರ್ನಾಟಕವಾಗಿದೆ. ಒಣ ಭೂಮಿಗಳಿಗೆ ನೀರಾವರಿ ವ್ಯವಸ್ಥೆ ಕಲ್ಪಿಸುವ ಜವಾಬ್ದಾರಿಯೂ ನಮ್ಮ ಮೇಲಿದೆ. ಅದಕ್ಕೆ ಅನುದಾನಗಳನ್ನು ಕೊಡಬೇಕು.
ರಾಜಧಾನಿ ಮೂಲಸೌಕರ್ಯಕ್ಕೆ 27,793 ಕೋಟಿ ರೂ. ಅಗತ್ಯ
ಬೆಂಗಳೂರಿನ ಮೂಲ ಸೌಕರ್ಯ ಅಭಿವೃದ್ಧಿಗೆ ಮುಂದಿನ 5 ವರ್ಷಗಳಲ್ಲಿ 1.15 ಲಕ್ಷ ಕೋಟಿ ರೂ. ಗಳಷ್ಟು ಹೂಡಿಕೆ ಅಗತ್ಯವಿದೆ. ಇದಕ್ಕಾಗಿ 16ನೇ ಹಣಕಾಸು ಆಯೋಗವು ಕನಿಷ್ಠ 27,793 ಕೋಟಿ ರೂ. ಗಳನ್ನಾದರೂ ನೀಡುವಂತೆ ಶಿಫಾರಸು ಮಾಡಬೇಕು.
ರಾಜ್ಯಗಳ ಹಂಚಿಕೆ ಶೇ.50ಕ್ಕೆ ಏರಿಸಿ
ಪ್ರಧಾನಿ ನರೇಂದ್ರ ಮೋದಿಯವರು ಗುಜರಾತಿನ ಮುಖ್ಯಮಂತ್ರಿಯಾಗಿದ್ದಾಗ ಒತ್ತಾಯ ಮಾಡುತ್ತಿದ್ದಂತೆಯೇ ರಾಜ್ಯಗಳಿಗೆ ಹಂಚಿಕೆ ಮಾಡುತ್ತಿರುವ ಶೇ. 41ರಷ್ಟು ಹಂಚಿಕೆಯನ್ನು ಶೇ. 50ಕ್ಕೆ ಏರಿಕೆ ಮಾಡಬೇಕು. ಸೆಸ್ ಮತ್ತು ಸರ್ಚಾರ್ಜ್ಗಳನ್ನು ಕೇಂದ್ರದ ಆದಾಯದ ಶೇ. 5ಕ್ಕೆ ಮಾತ್ರ ಸೀಮಿತಗೊಳಿಸಿ, ಉಳಿಕೆ ಮೊತ್ತವನ್ನು ರಾಜ್ಯಗಳಿಗೆ ಹಂಚಬೇಕು ಎಂಬುದು ಕರ್ನಾಟಕದ ಸಮಸ್ತ ನಾಗರಿಕರ ಪರವಾಗಿ ನನ್ನ ಒತ್ತಾಯವಾಗಿದೆ ಎಂದು ಪತ್ರದಲ್ಲಿ ವಿವರಿಸಿದ್ದಾರೆ.

