
ಬೆಂಗಳೂರು ನಗರಾಭಿವೃದ್ಧಿ ಸಚಿವ ಕೃಷ್ಣ ಬೈರೇಗೌಡ
ಬೆಂಗಳೂರು ನಗರಾಭಿವೃದ್ಧಿ ಖಾತೆ ಗೊಂದಲಕ್ಕೆ ತೆರೆ; ಜಿಬಿಎ ಅಧಿಕಾರಿಗಳ ಸಭೆ ಕರೆದ ಸಚಿವ ಕೃಷ್ಣ ಬೈರೇಗೌಡ
ಜಿಬಿಎ ವ್ಯಾಪ್ತಿಯ ಎಲ್ಲಾ ಹಿರಿಯ ಅಧಿಕಾರಿಗಳು ಮತ್ತು ಕಮಿಷನರ್ಗಳ ಸಭೆ ಕರೆದಿದ್ದಾರೆ. ಮುಂಗಾರು ಮಳೆ ಆರಂಭವಾಗಿರುವುದರಿಂದ ನಗರದ ಪ್ರಸ್ತುತ ಪರಿಸ್ಥಿತಿ, ರಾಜಕಾಲುವೆಗಳ ನಿರ್ವಹಣೆ ಹಾಗೂ ಇಲಾಖೆಯ ಪ್ರಗತಿ ಪರಿಶೀಲನೆ ನಡೆಸಲಿದ್ದಾರೆ.
ತೀವ್ರ ಕುತೂಹಲ ಮೂಡಿಸಿದ್ದ ಬೆಂಗಳೂರು ನಗರಾಭಿವೃದ್ಧಿ ಸಚಿವ ಸ್ಥಾನದ ಗೊಂದಲಕ್ಕೆ ಕೊನೆಗೂ ತೆರೆ ಬಿದ್ದಿದೆ. ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಮತ್ತು ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ ಅವರೊಂದಿಗೆ ನಡೆಸಿದ ಸರಣಿ ಮಾತುಕತೆಯ ಬಳಿಕ, ಸಚಿವ ಕೃಷ್ಣ ಬೈರೇಗೌಡ ಮಂಗಳವಾರ ಅಧಿಕೃತವಾಗಿ ಜವಾಬ್ದಾರಿ ವಹಿಸಿಕೊಳ್ಳಲು ಸಜ್ಜಾಗಿದ್ದಾರೆ.
ಬಿಡಿಎ, ಬಿಎಂಆರ್ಡಿಎ ಹೊರತುಪಡಿಸಿ ಹೊಣೆ
ಬೆಂಗಳೂರು ಅಭಿವೃದ್ಧಿ ಇಲಾಖೆಯ ಪ್ರಮುಖ ಯೋಜನಾ ಸಂಸ್ಥೆಗಳಾದ ಬೆಂಗಳೂರು ನಗರಾಭಿವೃದ್ಧಿ ಪ್ರಾಧಿಕಾರ (ಬಿಡಿಎ) ಮತ್ತು ಬೆಂಗಳೂರು ಮಹಾನಗರ ಪ್ರದೇಶಾಭಿವೃದ್ಧಿ ಪ್ರಾಧಿಕಾರ (ಬಿಎಂಆರ್ಡಿಎ) ಇಲಾಖೆಗಳನ್ನು ತಮಗೆ ನೀಡಬೇಕು, ಇಲ್ಲದಿದ್ದರೆ ಕೆಲಸ ಮಾಡಲು ಕಷ್ಟವಾಗುತ್ತದೆ ಎಂದು ಕೃಷ್ಣ ಬೈರೇಗೌಡರು ಬಿಗಿಪಟ್ಟು ಹಿಡಿದಿದ್ದರು. ಆದರೆ, ಈ ಎರಡು ಪ್ರಮುಖ ಸಂಸ್ಥೆಗಳು ಸಿಎಂ ಡಿ.ಕೆ. ಶಿವಕುಮಾರ್ ಅವರ ಬಳಿಯೇ ಉಳಿಯಲಿದ್ದು, ಇವುಗಳನ್ನು ಹೊರತುಪಡಿಸಿ ಉಳಿದ ಬೆಂಗಳೂರು ಅಭಿವೃದ್ಧಿ ಖಾತೆಯನ್ನು ನಿಭಾಯಿಸಲು ಸಚಿವರು ಒಪ್ಪಿಕೊಂಡಿದ್ದಾರೆ.
ಹಿರಿಯ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಸಚಿವ ಕೃಷ್ಣ ಬೈರೇಗೌಡ
ಹಿರಿಯ ಅಧಿಕಾರಿಗಳ ಮಹತ್ವದ ಸಭೆ
ಜವಾಬ್ದಾರಿ ವಹಿಸಿಕೊಳ್ಳುತ್ತಿದ್ದಂತೆ ಬೆಂಗಳೂರು ನಗರ ಆಡಳಿತಕ್ಕೆ ಚುರುಕು ಮುಟ್ಟಿಸಲು ತಯಾರಿ ನಡೆಸಿರುವ ಸಚಿವ ಕೃಷ್ಣ ಬೈರೇಗೌಡರು ಇಂದು ಬೆಳಿಗ್ಗೆ 10.30ಕ್ಕೆ ಅಪರ ಮುಖ್ಯ ಕಾರ್ಯದರ್ಶಿ ಸೇರಿದಂತೆ ಗ್ರೇಟರ್ ಬೆಂಗಳೂರು ಪ್ರಾಧಿಕಾರ ವ್ಯಾಪ್ತಿಯ ಎಲ್ಲಾ ಹಿರಿಯ ಅಧಿಕಾರಿಗಳು ಮತ್ತು ಐದು ಮಹಾನಗರ ಪಾಲಿಕೆಗಳ ಕಮಿಷನರ್ಗಳ ಸಭೆ ಕರೆದಿದ್ದಾರೆ. ಮುಂಗಾರು ಮಳೆ ಆರಂಭವಾಗಿರುವುದರಿಂದ ನಗರದ ಪ್ರಸ್ತುತ ಪರಿಸ್ಥಿತಿ, ರಾಜಕಾಲುವೆಗಳ ನಿರ್ವಹಣೆ ಹಾಗೂ ಇಲಾಖೆಯ ಪ್ರಗತಿ ಪರಿಶೀಲನೆ ನಡೆಸಲಿದ್ದಾರೆ.
ಮೂಲಸೌಕರ್ಯಗಳಿಗೆ ವೇಗ
ಹೈಕಮಾಂಡ್ ನಾಯಕರು ಹಾಗೂ ಸಿಎಂ ಡಿ.ಕೆ. ಶಿವಕುಮಾರ್ ಭರವಸೆಯ ಬೆನ್ನಲ್ಲೇ ಸಚಿವ ಕೃಷ್ಣ ಬೈರೇಗೌಡ ಅಧಿಕಾರ ವಹಿಸಿಕೊಳ್ಳುತ್ತಿರುವುದರಿಂದ, ಮುಂಗಾರು ಮಳೆಯಿಂದ ಕಂಗೆಟ್ಟಿರುವ ಸಿಲಿಕಾನ್ ಸಿಟಿಯ ಮೂಲಸೌಕರ್ಯ ಕಾಮಗಾರಿಗಳಿಗೆ ಮುಂದಿನ ದಿನಗಳಲ್ಲಿ ವೇಗ ಸಿಗುವ ನಿರೀಕ್ಷೆಯಿದೆ.

