
ರಾಜ್ಯ ಸಹಕಾರಿ ತೋಟಗಾರಿಕೆ ಮಹಾಮಂಡಳದ ಅಧ್ಯಕ್ಷ ಬಿ.ಡಿ ಭೂಕಾಂತ್
ಬಿಜೆಪಿ ಕಾರ್ಯಕರ್ತನಿಗೆ ಸಚಿವ ಸ್ಥಾನಮಾನ! ವಿರೋಧಕ್ಕೆ ಮಣಿದ ಕಾಂಗ್ರೆಸ್ ಸರ್ಕಾರ
ಫೆ.7ರಂದು ರಾಜ್ಯ ಸರ್ಕಾರ ಹೊರಡಿಸಿದ್ದ ಆದೇಶದಲ್ಲಿ 54 ನಿಗಮ ಮಂಡಳಿ ಅಧ್ಯಕ್ಷರಿಗೆ ರಾಜ್ಯ ಸಚಿವ ಸ್ಥಾನಮಾನ ನೀಡಿತ್ತು. ಇದರಲ್ಲಿ 53 ಜನರು ಕಾಂಗ್ರೆಸ್ನವರಾಗಿದ್ದು, ಒಬ್ಬರು ಮಾತ್ರ ಬಿಜೆಪಿ ಬೆಂಬಲಿಗರಾಗಿದ್ದಾರೆ.
ನಿಗಮ ಮಂಡಳಿ ಅಧ್ಯಕ್ಷರಾಗಿರುವ ಬಿಜೆಪಿ ಮುಖಂಡರೊಬ್ಬರಿಗೆ ರಾಜ್ಯ ಸಚಿವ ಸ್ಥಾನಮಾನ ನೀಡಿರುವ ಸಿಎಂ ಸಿದ್ದರಾಮಯ್ಯ ನಿರ್ಧಾರದ ವಿರುದ್ಧ ಸ್ವಪಕ್ಷದಲ್ಲೇ ವಿರೋಧ ಹೆಚ್ಚಾದ ಹಿನ್ನೆಲೆ ರಾಜ್ಯ ಸರ್ಕಾರ ನೂತನ ಆದೇಶ ಹೊರಡಿಸಿದ್ದು, ಅಧ್ಯಕ್ಷರಿಗೆ ನೀಡಲಾಗಿದ್ದ ವಿಶೇಷ ಸ್ಥಾನಮಾನ ಹಿಂಪಡೆಯಲಾಗಿದೆ ಎಂದು ತಿಳಿಸಿದೆ.
ಈ ಕುರಿತು ಬುಧವಾರ(ಫೆ.11) ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ಬಾಣದರಂಗಯ್ಯ ಆದೇಶದ ಹೊರಡಿಸಿದ್ದು, "ಕರ್ನಾಟಕ ರಾಜ್ಯ ಸಹಕಾರಿ ತೋಟಗಾರಿಕೆ ಮಾರಾಟ ಮಹಾಮಂಡಳಿ ನಿಯಮಿತದ ಅಧ್ಯಕ್ಷ ಬಿ.ಡಿ. ಭೂಕಾಂತ್ಗೆ ನೀಡಿದ್ದ ರಾಜ್ಯ ಸಚಿವ ಸ್ಥಾನಮಾನವನ್ನು" ಹಿಂಪಡೆಯಲಾಗಿದೆ ಎಂದು ಹೇಳಿದ್ದಾರೆ.
ಏನಿದು ವಿವಾದ ?
ಫೆ.7ರಂದು ರಾಜ್ಯ ಸರ್ಕಾರ ಹೊರಡಿಸಿದ್ದ ಆದೇಶದಲ್ಲಿ 54 ನಿಗಮ ಮಂಡಳಿ ಅಧ್ಯಕ್ಷರಿಗೆ ರಾಜ್ಯ ಸಚಿವ ಸ್ಥಾನಮಾನ ನೀಡಿತ್ತು. ಇದರಲ್ಲಿ 53 ಜನರು ಕಾಂಗ್ರೆಸ್ನವರಾಗಿದ್ದು, ರಾಜ್ಯ ಸಹಕಾರಿ ತೋಟಗಾರಿಕೆ ಮಹಾಮಂಡಳದ ಅಧ್ಯಕ್ಷ ಬಿ.ಡಿ ಭೂಕಾಂತ್ ಬಿಜೆಪಿ ಜೊತೆ ಗುರುತಿಸಿಕೊಂಡಿದ್ದಾರೆ. ಈ ಮೊದಲು ಶಿವಮೊಗ್ಗದ ಹಾಪ್ಕಾಮ್ಸ್ ಅಧ್ಯಕ್ಷರಾಗಿ ಇದೀಗ ಮಹಾಮಂಡಳದ ಅಧ್ಯಕ್ಷರಾಗಿದ್ದು, ಇದನ್ನು ಗಮನಿಸದ ಸರ್ಕಾರ ಎಲ್ಲಾ ಅಧ್ಯಕ್ಷರಿಗೂ ರಾಜ್ಯ ಸಚಿವ ಸಂಪುಟ ಸ್ಥಾನಮಾನ ನೀಡಿ ಆದೇಶಿಸಿತ್ತು.
ಸರ್ಕಾರದ ಆದೇಶಕ್ಕೆ ಸ್ಪಪಕ್ಷೀಯ ಕಾರ್ಯಕರ್ತರೇ ಅಸಮಾಧಾನವಾಗಿದ್ದು, ಬಿಜೆಪಿ ಜೊತೆ ಗುರುತಿಸಿಕೊಂಡಿರುವವರಿಗೆ ಸ್ಥಾನಮಾನ ನೀಡುವುದು ಸರಿಯಲ್ಲ. ಇದರಿಂದ ಪಕ್ಷದ ಕಾರ್ಯಕರ್ತರ ಮನೋಸ್ಥೈರ್ಯ ಕುಗ್ಗಲಿದೆ. ಈ ಕೂಡಲೇ ಸರ್ಕಾರ ಬಿ.ಡಿ. ಭೂಕಾಂತ್ಗೆ ನೀಡಿದ್ದ ಸ್ಥಾನಮಾನ ವಾಪಾಸ್ ಪಡೆಬೇಕು ಎಂದು ಇತ್ತೀಚೆಗೆ ಆಗ್ರಹಿಸಿದ್ದರು.
ಅತಿಥಿಗಳಿಗೆ ಆದ್ಯತೆ: ಡಿ.ಕೆ. ಸುರೇಶ್ ವ್ಯಂಗ್ಯ
ಬಿಜೆಪಿ ಜೊತೆಗೆ ಗುರುತಿಸಿಕೊಂಡಿರುವ ರಾಜ್ಯ ಸಹಕಾರಿ ತೋಟಗಾರಿಕೆ ಮಹಾಮಂಡಳದ ಅಧ್ಯಕ್ಷ ಬಿ.ಡಿ ಭೂಕಾಂತ್ಗೆ ರಾಜ್ಯ ಸಚಿವ ಸ್ಥಾನಮಾನ ನೀಡಿದ್ದಕ್ಕೆ ಪ್ರತಿಕ್ರಿಯಿಸಿದ್ದ ಡಿ.ಕೆ.ಸುರೇಶ್, ಕಾಂಗ್ರೆಸ್ ಎಲ್ಲರನ್ನು ಗೌರವಿಸುತ್ತದೆ. ಸರ್ಕಾರ ಎಲ್ಲರನ್ನು ಜೊತೆಗೆ ಕರೆದೊಯ್ಯಬೇಕು ಎಂಬ ನಿಲುವು ಹೊಂದಿದೆ. ನಾವು ಸರ್ವಧರ್ಮ ನೀತಿಯನ್ನು ಅನುಸರಿಸುತ್ತಿದ್ದು, ಬಿಜೆಪಿ, ಜೆಡಿಎಸ್ ಎಲ್ಲರೂ ಕೂಡ ಇದರಲ್ಲಿದ್ದಾರೆ. ಎಲ್ಲಾ ವಿಚಾರದಲ್ಲೂ ನಾವು ಅತಿಥಿಗಳಿಗೆ ಮೊದಲ ಆದ್ಯತೆ ನೀಡುತ್ತೇವೆ ಎಂದು ವ್ಯಂಗ್ಯವಾಡಿದ್ದರು.

