ರಾಜ್ಯಸಭೆ ಚುನಾವಣೆ: ಮಲ್ಲಿಕಾರ್ಜುನ ಖರ್ಗೆ ಸೇರಿ ನಾಲ್ವರು ಅವಿರೋಧವಾಗಿ ಆಯ್ಕೆ
x

ರಾಜ್ಯಸಭೆ ಚುನಾವಣೆ: ಮಲ್ಲಿಕಾರ್ಜುನ ಖರ್ಗೆ ಸೇರಿ ನಾಲ್ವರು ಅವಿರೋಧವಾಗಿ ಆಯ್ಕೆ

ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮತ್ತೊಮ್ಮೆ ರಾಜ್ಯಸಭೆಗೆ ಆಯ್ಕೆಯಾಗಿದ್ದಾರೆ. ಕಾಂಗ್ರೆಸ್‌ನ ಪವನ್ ಖೇರಾ, ಮನ್ಸೂರ್ ಅಲಿ ಖಾನ್ ಮತ್ತು ಬಿಜೆಪಿಯ ಎಂ. ನಾಗರಾಜ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.


Click the Play button to hear this message in audio format

ರಾಜ್ಯ ವಿಧಾನಸಭೆಯಿಂದ ರಾಜ್ಯಸಭೆಯ ನಾಲ್ಕು ಸ್ಥಾನಗಳಿಗೆ ನಡೆಯಬೇಕಿದ್ದ ದ್ವೈವಾರ್ಷಿಕ ಚುನಾವಣೆಯು ಯಾವುದೇ ಮತದಾನದ ಪ್ರಕ್ರಿಯೆಯಿಲ್ಲದೆ ಅಂತಿಮಗೊಂಡಿದೆ. ಕಣದಲ್ಲಿದ್ದ ನಾಲ್ವರು ಅಭ್ಯರ್ಥಿಗಳು ಅವಿರೋಧವಾಗಿ ಆಯ್ಕೆಯಾಗುವ ಮೂಲಕ ರಾಜ್ಯಸಭೆಗೆ ಪ್ರವೇಶಿಸಿದ್ದಾರೆ. ಈ ಕುರಿತು ವಿಧಾನಸಭೆಯ ಕಾರ್ಯದರ್ಶಿ ಹಾಗೂ ಚುನಾವಣಾಧಿಕಾರಿಯಾದ ಎಂ.ಕೆ. ವಿಶಾಲಾಕ್ಷಿ ಅವರು ಅಧಿಕೃತ ಘೋಷಣೆ ಹೊರಡಿಸಿದ್ದಾರೆ.

ಕೇಂದ್ರ ಚುನಾವಣಾ ಆಯೋಗವು ರಾಜ್ಯಸಭೆಯ ನಾಲ್ಕು ಸ್ಥಾನಗಳಿಗೆ ದ್ವೈವಾರ್ಷಿಕ ಚುನಾವಣೆಯನ್ನು ಘೋಷಿಸಿತ್ತು. ಜೂ.1 ರಂದು ಅಧಿಸೂಚನೆ ಹೊರಬಿದ್ದಿದ್ದು, ನಾಮಪತ್ರ ಸಲ್ಲಿಕೆಗೆ ಜೂ.8 ಕೊನೆಯ ದಿನವಾಗಿತ್ತು. ನಾಮಪತ್ರ ಹಿಂಪಡೆಯಲು ಜೂ.11ರವರೆಗೆ ಕಾಲಾವಕಾಶ ನೀಡಲಾಗಿತ್ತು. ಒಂದು ವೇಳೆ ಅಭ್ಯರ್ಥಿಗಳ ಸಂಖ್ಯೆ ಹೆಚ್ಚಾಗಿದ್ದರೆ ಜೂನ್ 18ರಂದು ಮತದಾನ ನಡೆಯಬೇಕಿತ್ತು. ಆದರೆ, ಕಣದಲ್ಲಿದ್ದ ಅಭ್ಯರ್ಥಿಗಳ ಸಂಖ್ಯೆಯು ತೆರವಾಗಿದ್ದ ಸ್ಥಾನಗಳಿಗೆ ಸೀಮಿತವಾಗಿದ್ದರಿಂದ, ಚುನಾವಣೆ ಅಗತ್ಯವಿಲ್ಲದಂತಾಯಿತು. ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಭೋಸರಾಜು ಸೋಮಯ್ಯ ಅವರ ನಾಮಪತ್ರವು ತಾಂತ್ರಿಕ ಕಾರಣಗಳಿಂದ ತಿರಸ್ಕೃತಗೊಂಡ ಹಿನ್ನೆಲೆಯಲ್ಲಿ, ಕಣದಲ್ಲಿ ಅಧಿಕೃತವಾಗಿ ನಾಲ್ವರು ಅಭ್ಯರ್ಥಿಗಳು ಮಾತ್ರ ಉಳಿದುಕೊಂಡರು.

ಅವಿರೋಧವಾಗಿ ಆಯ್ಕೆಯಾದ ಅಭ್ಯರ್ಥಿಗಳು

ಎಐಸಿಸಿ ಅಧ್ಯಕ್ಷರಾಗಿರುವ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರು ಮತ್ತೊಮ್ಮೆ ಮೇಲ್ಮನೆಗೆ ಆಯ್ಕೆಯಾಗಿದ್ದಾರೆ. ಕಾಂಗ್ರೆಸ್‌ ವಕ್ತಾರ ಪವನ್ ಖೇರಾ ಅವರು ಈ ಬಾರಿ ರಾಜ್ಯಸಭೆಗೆ ಪ್ರವೇಶಿಸಿದ್ದಾರೆ. ಕಾಂಗ್ರೆಸ್ ಪಕ್ಷದ ಪ್ರಭಾವಿ ನಾಯಕರಾಗಿರುವ ಮನ್ಸೂರ್ ಅಲಿ ಖಾನ್ ಅವರು ರಾಜ್ಯಸಭೆಗೆ ಆಯ್ಕೆಯಾಗಿದ್ದಾರೆ. ಬಿಜೆಪಿ ವತಿಯಿಂದ ಸ್ಪರ್ಧಿಸಿದ್ದ ಎಂ. ನಾಗರಾಜ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ, ಎಐಸಿಸಿ ಅಧ್ಯಕ್ಷ ಎಂ. ಮಲ್ಲಿಕಾರ್ಜುನ ಖರ್ಗೆ, ಬಿಜೆಪಿಯ ಈರಣ್ಣ ಕಡಾಡಿ, ಬಿಜೆಪಿಯ ನಾರಾಯಣ ಸಾ ಬಾಂಡಗೆ ಇವರ ಅವಧಿಯು ಮುಕ್ತಾಯವಾಗುತ್ತಿರುವುದರಿಂದ, ತೆರವಾಗಿದ್ದ ನಾಲ್ಕು ಸ್ಥಾನಗಳಿಗೆ ಆಯೋಗವು ಚುನಾವಣೆ ಘೋಷಣೆ ಮಾಡಲಾಗಿತ್ತು.

ವಿಧಾನಸೌಧದಲ್ಲಿ ಫಲಿತಾಂಶ ಪ್ರಕಟಿಸಿದ ಚುನಾವಣಾಧಿಕಾರಿ ಎಂ.ಕೆ. ವಿಶಾಲಾಕ್ಷಿ, ನಿಯಮದಂತೆ ನಾಮಪತ್ರಗಳ ಪರಿಶೀಲನೆ ನಡೆಸಲಾಗಿದೆ. ಸ್ವತಂತ್ರ ಅಭ್ಯರ್ಥಿಯ ನಾಮಪತ್ರ ತಿರಸ್ಕೃತಗೊಂಡ ನಂತರ ಕಣದಲ್ಲಿ ಉಳಿದ ನಾಲ್ವರು ಅಭ್ಯರ್ಥಿಗಳು ಅವಿರೋಧವಾಗಿ ಆಯ್ಕೆಯಾಗಿದ್ದಾರೆ ಎಂದು ಘೋಷಿಸಿದರು. ಈ ಮೂಲಕ ಯಾವುದೇ ರಾಜಕೀಯ ಪಕ್ಷಗಳ ನಡುವಿನ ಕದನವಿಲ್ಲದೆ ರಾಜ್ಯಸಭಾ ಚುನಾವಣೆ ಶಾಂತಿಯುತವಾಗಿ ಮುಕ್ತಾಯಗೊಂಡಿದೆ.

ಮಲ್ಲಿಕಾರ್ಜುನ ಖರ್ಗೆ ಅವರ ಪುನರಾಯ್ಕೆಯು ರಾಷ್ಟ್ರ ಮಟ್ಟದಲ್ಲಿ ಕಾಂಗ್ರೆಸ್ ಪಾಲಿಗೆ ಅತ್ಯಂತ ಮಹತ್ವದ್ದಾಗಿದೆ. ವಿರೋಧ ಪಕ್ಷದ ನಾಯಕರಾಗಿ ರಾಜ್ಯಸಭೆಯಲ್ಲಿ ಅವರು ವಹಿಸುತ್ತಿರುವ ಪಾತ್ರವು ಪಕ್ಷಕ್ಕೆ ಬಲ ತುಂಬುತ್ತಿದೆ. ಅದೇ ರೀತಿ, ಬಿಜೆಪಿ ತನ್ನ ಓರ್ವ ಸದಸ್ಯರನ್ನು ಆಯ್ಕೆ ಮಾಡುವ ಮೂಲಕ ರಾಜ್ಯಸಭೆಯಲ್ಲಿ ತನ್ನ ಸಂಖ್ಯಾಬಲವನ್ನು ಕಾಯ್ದುಕೊಂಡಿದೆ. ಪವನ್ ಖೇರಾ ಮತ್ತು ಮನ್ಸೂರ್ ಅಲಿ ಖಾನ್ ಅವರ ಆಯ್ಕೆಯು ಯುವ ಮತ್ತು ಅನುಭವಿ ನಾಯಕರ ಸಮತೋಲನವನ್ನು ಕಾಂಗ್ರೆಸ್ ಸಂಸದೀಯ ಮಂಡಳಿಯಲ್ಲಿ ಪ್ರತಿಬಿಂಬಿಸುತ್ತದೆ.

Read More
Next Story