x

ಸತೀಶ್ ಜಾರಕಿಹೊಳಿ ನಿವಾಸಗಳ ಮೇಲೆ ಇಡಿ ದಾಳಿ; ದಾಖಲೆಗಳ ಶೋಧ

ಸತೀಶ್ ಜಾರಕಿಹೊಳಿ ಅವರ ಸಂಬಂಧಿ ಹಾಗೂ ಅಬಕಾರಿ ಇಲಾಖೆಯಲ್ಲಿ ಉನ್ನತ ಹುದ್ದೆಯಲ್ಲಿದ್ದ ಮಂಜುನಾಥ್ ಅವರ ನಿವಾಸದ ಮೇಲೂ ಇತ್ತೀಚೆಗೆ ಇಡಿ ದಾಳಿ ನಡೆಸಿತ್ತು. ಆ ಸಂದರ್ಭದಲ್ಲಿ ಹಣ ವರ್ಗಾವಣೆ ಹಾಗೂ ಹೂಡಿಕೆಗಳಿಗೆ ಸಂಬಂಧಿಸಿದ ದಾಖಲೆಗಳು ಪತ್ತೆಯಾಗಿದ್ದವು ಎನ್ನಲಾಗಿದೆ.


Click the Play button to hear this message in audio format

ಕರ್ನಾಟಕದ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರಿಗೆ ಸೇರಿದ ಬೆಂಗಳೂರಿನ ಸರ್ಕಾರಿ ನಿವಾಸ, ಡಾಲರ್ಸ್ ಕಾಲನಿ ನಿವಾಸ ಸೇರಿದಂತೆ ಬೆಳಗಾವಿ, ಮಹಾರಾಷ್ಟ್ರ ಮತ್ತು ಗೋವಾದಲ್ಲಿರುವ ಹಲವು ಸ್ಥಳಗಳ ಮೇಲೆ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಬುಧವಾರ ಏಕಕಾಲದಲ್ಲಿ ಶೋಧ ನಡೆಸಿದ್ದಾರೆ. ಸುಮಾರು 25ಕ್ಕೂ ಹೆಚ್ಚು ಅಧಿಕಾರಿಗಳ ತಂಡಗಳು 15ಕ್ಕೂ ಹೆಚ್ಚು ಸ್ಥಳಗಳಲ್ಲಿ ಪರಿಶೀಲನೆ ನಡೆಸುತ್ತಿದ್ದು, ಮಹತ್ವದ ದಾಖಲೆಗಳನ್ನು ವಶಪಡಿಸಿಕೊಂಡಿರುವುದಾಗಿ ತಿಳಿದುಬಂದಿದೆ.

ಸಂಬಂಧಿ ಮಂಜುನಾಥ್ ನಿವಾಸದ ಮೇಲಿನ ದಾಳಿಯ ಬೆನ್ನಲ್ಲೇ ಶೋಧ

ಸತೀಶ್ ಜಾರಕಿಹೊಳಿ ಅವರ ಸಂಬಂಧಿ ಹಾಗೂ ಅಬಕಾರಿ ಇಲಾಖೆಯಲ್ಲಿ ಉನ್ನತ ಹುದ್ದೆಯಲ್ಲಿದ್ದ ಮಂಜುನಾಥ್ ಅವರ ನಿವಾಸದ ಮೇಲೂ ಇತ್ತೀಚೆಗೆ ಇಡಿ ದಾಳಿ ನಡೆಸಿತ್ತು. ಆ ಸಂದರ್ಭದಲ್ಲಿ ಹಣ ವರ್ಗಾವಣೆ ಹಾಗೂ ಹೂಡಿಕೆಗಳಿಗೆ ಸಂಬಂಧಿಸಿದ ದಾಖಲೆಗಳು ಪತ್ತೆಯಾಗಿದ್ದವು ಎನ್ನಲಾಗಿದೆ. ಇದೀಗ ಸತೀಶ್ ಜಾರಕಿಹೊಳಿ ಅವರ ನಿವಾಸಗಳ ಮೇಲಿನ ದಾಳಿಗೂ ಆ ಪ್ರಕರಣಕ್ಕೂ ಏನಾದರೂ ಸಂಬಂಧವಿದೆಯೇ ಎಂಬುದನ್ನು ಅಧಿಕಾರಿಗಳು ಪರಿಶೀಲಿಸುತ್ತಿದ್ದಾರೆ.

ವಿದೇಶಿ ಹೂಡಿಕೆ, ಹಣ ವರ್ಗಾವಣೆ ಬಗ್ಗೆಯೂ ತನಿಖೆ?

ಸತೀಶ್ ಜಾರಕಿಹೊಳಿ ಅವರಿಗೆ ಸಂಬಂಧಿಸಿದ ಹೂಡಿಕೆಗಳು, ಹಣ ವರ್ಗಾವಣೆ ಹಾಗೂ ವಹಿವಾಟುಗಳ ಕುರಿತಂತೆ ಇಡಿ ಅಧಿಕಾರಿಗಳು ದಾಖಲೆಗಳನ್ನು ಪರಿಶೀಲಿಸುತ್ತಿದ್ದಾರೆ ಎನ್ನಲಾಗಿದೆ. ವಿದೇಶದಲ್ಲಿನ ಹೂಡಿಕೆ ಅಥವಾ ಹಣ ವರ್ಗಾವಣೆಗೆ ಸಂಬಂಧಿಸಿದ ವಿಚಾರಗಳ ಹಿನ್ನೆಲೆಯಲ್ಲಿ ಈ ಶೋಧ ನಡೆದಿರಬಹುದು ಎಂಬ ಚರ್ಚೆಯೂ ಇದೆ. ಆದರೆ ದಾಳಿಯ ನಿಖರ ಕಾರಣ ಹಾಗೂ ಪತ್ತೆಯಾಗಿರುವ ದಾಖಲೆಗಳ ಕುರಿತು ಇಡಿ ಅಧಿಕೃತ ಮಾಹಿತಿ ನೀಡಬೇಕಿದೆ.

ಸಚಿವ ಸಂಪುಟ ಸಭೆಗೂ ಮುನ್ನವೇ ದಾಳಿ

ಇಂದು ಸಚಿವ ಸಂಪುಟ ಸಭೆ ನಡೆಯಲಿರುವ ಹಿನ್ನೆಲೆಯಲ್ಲಿ ಸತೀಶ್ ಜಾರಕಿಹೊಳಿ ಬೆಂಗಳೂರಿಗೆ ಆಗಮಿಸಿದ್ದರು. ಈ ಸಂದರ್ಭದಲ್ಲಿ ಅವರ ನಿವಾಸಗಳ ಮೇಲೆ ಏಕಕಾಲದಲ್ಲಿ ಇಡಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ದಾಳಿ ವೇಳೆ ಸಚಿವರು ಮನೆಯಲ್ಲೇ ಇದ್ದರು ಎನ್ನಲಾಗಿದೆ. ಶೋಧ ಕಾರ್ಯ ಸಂಜೆ ಅಥವಾ ರಾತ್ರಿ ವರೆಗೂ ಮುಂದುವರಿಯುವ ಸಾಧ್ಯತೆಯಿದ್ದು, ಬಳಿಕ ಇಡಿ ಅಧಿಕಾರಿಗಳಿಂದ ಅಧಿಕೃತ ಮಾಹಿತಿ ಹೊರಬರುವ ನಿರೀಕ್ಷೆಯಿದೆ.

ರಾಜಕೀಯ ವಲಯದಲ್ಲಿ ಕುತೂಹಲ

ಪ್ರಭಾವಿ ಕಾಂಗ್ರೆಸ್ ನಾಯಕರಾಗಿರುವ ಸತೀಶ್ ಜಾರಕಿಹೊಳಿ ಅವರ ನಿವಾಸಗಳ ಮೇಲೆ ಇಡಿ ದಾಳಿ ನಡೆದಿರುವುದು ರಾಜ್ಯ ರಾಜಕೀಯದಲ್ಲಿ ಕುತೂಹಲ ಮೂಡಿಸಿದೆ. ದಾಳಿಯನ್ನು ಕಾಂಗ್ರೆಸ್ ಹೇಗೆ ಪ್ರತಿಕ್ರಿಯಿಸುತ್ತದೆ, ಬಿಜೆಪಿ ಇದನ್ನು ರಾಜಕೀಯ ಅಸ್ತ್ರವಾಗಿ ಬಳಸಿಕೊಳ್ಳುತ್ತದೆಯೇ ಎಂಬುದು ಮುಂದಿನ ಬೆಳವಣಿಗೆಯಲ್ಲಿ ಸ್ಪಷ್ಟವಾಗಲಿದೆ. ದಾಳಿಯಲ್ಲಿ ಪತ್ತೆಯಾಗುವ ದಾಖಲೆಗಳು ಮತ್ತು ಇಡಿ ನೀಡುವ ಅಧಿಕೃತ ಹೇಳಿಕೆ ಈ ಪ್ರಕರಣದ ಮುಂದಿನ ದಿಕ್ಕನ್ನು ನಿರ್ಧರಿಸಲಿದೆ.

Read More
Next Story