ಆರೋಪಿಯ ಕಸ್ಟಡಿಗೆ ಆಗ್ರಹಿಸಿ ಕಲ್ಲು ತೂರಾಟ: 14 ಪೊಲೀಸರಿಗೆ ಗಾಯ
x

ಆರೋಪಿಯ ಕಸ್ಟಡಿಗೆ ಆಗ್ರಹಿಸಿ ಕಲ್ಲು ತೂರಾಟ: 14 ಪೊಲೀಸರಿಗೆ ಗಾಯ

ಮಹಾರಾಷ್ಟ್ರದ ಜಲ್ಗಾಂವ್ ಜಿಲ್ಲೆಯ ಜಮ್ನೇರ್‌ನಲ್ಲಿ ಆರು ವರ್ಷದ ಬಾಲಕಿ ಹತ್ಯೆ. ಆರೋಪಿಯನ್ನು ಹಸ್ತಾಂತರಿಸುವಂತೆ ಒತ್ತಾಯಿಸಿ, ಗುಂಪೊಂದು ಕಲ್ಲು ತೂರಾಟ ನಡೆಸಿದೆ.


ಮಹಾರಾಷ್ಟ್ರದ ಜಲ್ಗಾಂವ್ ಜಿಲ್ಲೆಯ ಜಮ್ನೇರ್‌ನಲ್ಲಿ ಆರು ವರ್ಷದ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿ ಹತ್ಯೆ ಮಾಡಿದ ವ್ಯಕ್ತಿಯನ್ನು ಹಸ್ತಾಂತರಿಸುವಂತೆ ಒತ್ತಾಯಿಸಿ, ಗುಂಪೊಂದು ಕಲ್ಲು ತೂರಾಟ ನಡೆಸಿದೆ. ಘಟನೆಯಲ್ಲಿ ಕನಿಷ್ಠ 14 ಪೊಲೀಸರು ಗಾಯಗೊಂಡಿದ್ದಾರೆ.

ಗುರುವಾರ ರಾತ್ರಿ 9.30ರ ಸುಮಾರಿಗೆ ಜಮ್ನೇರ್ ಪೊಲೀಸ್ ಠಾಣೆ ಹೊರಗೆ ಕಲ್ಲು ತೂರಾಟ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ. ʻಜೂನ್ 11 ರ ರಾತ್ರಿ ಜಮ್ನೇರ್‌ನ ಚಿಂಚ್‌ಖೇಡಾ ಶಿವಾರ್ ಗ್ರಾಮದಲ್ಲಿ ಆರು ವರ್ಷದ ಬಾಲಕಿಯನ್ನು ಅಪಹರಿಸಿ, ಲೈಂಗಿಕ ದೌರ್ಜನ್ಯ ನಡೆಸಿ ಕೊಲೆ ಮಾಡಲಾಗಿದೆ. ಆರೋಪಿ ಕತ್ತಲೆಯಿಂದಾಗಿ ತಪ್ಪಿಸಿಕೊಂಡಿದ್ದಾನೆʼ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಆರೋಪಿ ಬಂಧನ: ʻಆರೋಪಿಯನ್ನು ಪೊಲೀಸರು ಗುರುವಾರ ಬಂಧಿಸಿದರು. ಬಂಧನದ ಬಗ್ಗೆ ಮಾಹಿತಿ ಪಡೆದ ಮೃತ ಬಾಲಕಿಯ ಕುಟುಂಬದ ಸದಸ್ಯರು, ಸಂಬಂಧಿಕರು ಮತ್ತು ಸ್ಥಳೀಯರು ಪೊಲೀಸ್ ಠಾಣೆ ಹೊರಗೆ ಜಮಾಯಿಸಿ, ಆರೋಪಿಯನ್ನು ಹಸ್ತಾಂತರಿಸುವಂತೆ ಒತ್ತಾಯಿಸಿದರು. ಘೋರ ಅಪರಾಧ ಮಾಡಿದ ಅವನಿಗೆ ಶಿಕ್ಷೆ ನೀಡುತ್ತೇವೆ ಎಂದರು,ʼ ಎಂದು ತಿಳಿಸಿದರು.

ಪೊಲೀಸ್ ಠಾಣೆ ಹೊರಗೆ ಜನರು ಧರಣಿ ಆರಂಭಿಸಿದರು. ಸ್ವಲ್ಪ ಸಮಯದ ನಂತರ ಪೊಲೀಸರು ಆರೋಪಿಯನ್ನು ಸುರಕ್ಷಿತ ಸ್ಥಳಕ್ಕೆ ಸ್ಥಳಾಂತ ರಿಸಿದರು. ವಿಷಯ ತಿಳಿದು ಸಿಟ್ಟಿಗೆದ್ದ ಗುಂಪು, ಪೊಲೀಸ್ ಠಾಣೆ ಮೇಲೆ ಕಲ್ಲು ತೂರಾಟ ನಡೆಸಿತು.

ಅಗ್ನಿಸ್ಪರ್ಶ: ಪೊಲೀಸರ ಮೇಲೆ ಹಲ್ಲೆ ನಡೆಸಿದ್ದಲ್ಲದೆ, ಬೆಂಕಿ ಹಚ್ಚಿ ಸಾರ್ವಜನಿಕ ಆಸ್ತಿಯನ್ನು ಹಾನಿಗೊಳಿಸಿದರು ಎಂದು ಪೊಲೀಸ್ ಅಧಿಕಾರಿ ತಿಳಿಸಿದರು. ಘಟನೆಯಲ್ಲಿ ಇನ್‌ಸ್ಪೆಕ್ಟರ್ ಸೇರಿದಂತೆ ಕನಿಷ್ಠ 14 ಪೊಲೀಸ್ ಸಿಬ್ಬಂದಿ ಗಾಯಗೊಂಡಿದ್ದಾರೆ. ಗುಂಪು ಚದುರಿಸಲು ಪೊಲೀಸರು ಬಲಪ್ರಯೋಗ ಮಾಡಿದರು. ಘಟನೆಯ ನಂತರ ಹೆಚ್ಚಿನ ಸಂಖ್ಯೆಯಲ್ಲಿ ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ ಎಂದು ಹೇಳಿದರು.

Read More
Next Story