
ಹುಬ್ಬಳ್ಳಿಯಲ್ಲಿ ಅತ್ಯಾಚಾರ ಆರೋಪಿಯ ಎನ್ಕೌಂಟರ್; ರಾಷ್ಟ್ರಿಯ ಮಾನವ ಹಕ್ಕು ಆಯೋಗದಿಂದ ಸ್ವಯಂ ಪ್ರೇರಿತ ಕೇಸ್
ಏಪ್ರಿಲ್ 14ರಂದು ಹುಬ್ಬಳ್ಳಿಯಲ್ಲಿ ಅಪ್ರಾಪ್ತ ಬಾಲಕಿಯೊಬ್ಬಳನ್ನು ಅಪಹರಿಸಿ ಅತ್ಯಾಚಾರ ಮಾಡಿ ಕೊಲೆ ಮಾಡಲಾಗಿತ್ತು. ಘಟನೆಯಿಂದ ಉದ್ರಿಕ್ತಗೊಂಡ ಸ್ಥಳೀಯ ನಿವಾಸಿಗಳು ಅಶೋಕ್ ನಗರ ಪೊಲೀಸ್ ಠಾಣೆಯ ಮುಂಭಾಗದಲ್ಲಿ ಪ್ರತಿಭಟನೆ ನಡೆಸಿ, ಆರೋಪಿ ಬಂಧನಕ್ಕೆ ಒತ್ತಾಯಿಸಿದ್ದರು.
ಹುಬ್ಬಳ್ಳಿಯಲ್ಲಿ ಏಪ್ರಿಲ್ 14ರಂದು ಅಪ್ರಾಪ್ತ ವಯಸ್ಸಿನ ಬಾಲಕಿಯನ್ನು ಅತ್ಯಾಚಾರ ಮಾಡಿ ಕೊಂದ ಆರೋಪಿಯನ್ನು ಪೊಲೀಸರು ಎನ್ಕೌಂಟರ್ ಮಾಡಿರುವ ಪ್ರಕರಣದ ಬಗ್ಗೆ ರಾಷ್ಟ್ರೀಯ ಮಾನವ ಹಕ್ಕು ಆಯೋಗ ಸ್ವಯಂಪ್ರೇರಿತ ದೂರು ದಾಖಲಿಸಿಕೊಂಡಿದೆ.
ಈ ಪ್ರಕರಣವು ಮಾನವ ಹಕ್ಕುಗಳ ಗಂಭೀರ ಉಲ್ಲಂಘನೆ ಎಂದು ಹೇಳಿರುವ ಆಯೋಗ, ಸರ್ಕಾರದ ಮುಖ್ಯ ಕಾರ್ಯದರ್ಶಿ ಮತ್ತು ಪೊಲೀಸ್ ಮಹಾನಿರ್ದೇಶಕರಿಗೆ (DGP) ನಾಲ್ಕು ವಾರಗಳ ಒಳಗೆ ವಿವರ ವರದಿಯನ್ನು ಸಲ್ಲಿಸುವಂತೆ ನೋಟಿಸ್ ಜಾರಿ ಮಾಡಿದೆ.
ಏಪ್ರಿಲ್ 14ರಂದು ಹುಬ್ಬಳ್ಳಿಯಲ್ಲಿ ಅಪ್ರಾಪ್ತ ಬಾಲಕಿಯೊಬ್ಬಳನ್ನು ಅಪಹರಿಸಿ ಅತ್ಯಾಚಾರ ಮಾಡಿ ಕೊಲೆ ಮಾಡಲಾಗಿತ್ತು. ಘಟನೆಯಿಂದ ಉದ್ರಿಕ್ತಗೊಂಡ ಸ್ಥಳೀಯ ನಿವಾಸಿಗಳು ಅಶೋಕ್ ನಗರ ಪೊಲೀಸ್ ಠಾಣೆಯ ಮುಂಭಾಗದಲ್ಲಿ ಪ್ರತಿಭಟನೆ ನಡೆಸಿ, ಆರೋಪಿ ಬಂಧನಕ್ಕೆ ಒತ್ತಾಯಿಸಿದ್ದರು. ಪೊಲೀಸರು ಕೆಲವೇ ಗಂಟೆಗಳಲ್ಲಿ ಆರೋಪಿಯನ್ನು ಬಂಧಿಸಿ ಆತನನ್ನು ತನಿಖೆಗಾಗಿ ಕರೆದೊಯ್ಯುವಾಗ ಪೊಲೀಸರ ಮೇಲೆ ದಾಳಿ ಮಾಡಲು ಯತ್ನಿಸಿದ್ದಾನೆ ಎಂದು ವರದಿಯಾಗಿದೆ. ಪ್ರತಿಯಾಗಿ ಪೊಲೀಸರು ಗುಂಡು ಹಾರಿಸಿದ್ದು, ಆತ ಮೃತಪಟ್ಟಿದ್ದ.
ಆರೋಪಿಯ ಸಾವು ಪೊಲೀಸ್ ಎನ್ಕೌಂಟರ್ನಲ್ಲಿ ಸಂಭವಿಸಿದ್ದು, ಕಾನೂನಿನ ಪ್ರಕಾರ ಆರೋಪಿಯ ಜೀವನದ ಹಕ್ಕಿನ ಮೇಲೆ ಪ್ರಶ್ನೆಗಳಾಗಿವೆ. ಹೀಗಾಗಿ ಆಯೋಗವು ಎನ್ಕೌಂಟರ್ನ ಸತ್ಯಾಸತ್ಯತೆ ಪರಿಶೀಲಿಸಲು ಬಯಸಿದೆ. ಆರೋಪಿಯು ತಪ್ಪಿತಸ್ಥನಾದರೂ ಕಾನೂನಿನ ಪ್ರಕಾರ ನ್ಯಾಯಾಲಯದಿಂದ ಶಿಕ್ಷೆ ವಿಧಿಸಬೇಕಾಗಿತ್ತು ಎಂದು ಆಯೋಗ ಹೇಳಿದೆ. ಕರ್ನಾಟಕ ಸರ್ಕಾರ ಮತ್ತು ಪೊಲೀಸ್ ಇಲಾಖೆಯು ಎನ್ಎಚ್ಆರ್ಸಿ ನೋಟಿಸ್ಗೆ ಪ್ರತಿಕ್ರಿಯೆಯಾಗಿ ನಾಲ್ಕು ವಾರಗಳ ಒಳಗೆ ತನಿಖಾ ವರದಿಯನ್ನು ಸಲ್ಲಿಸಬೇಕಾಗಿದೆ.