
ಪತ್ರಕರ್ತೆ ಗೌರಿ ಲಂಕೇಶ್ ಹಾಗೂ ಕೊಲೆ ಆರೋಪಿ ಶ್ರೀಕಾಂತ್ ಪಂಗಾರ್ಕರ್
ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸಿ ಬಿಜೆಪಿ ಸೋಲಿಸಿದ ಗೌರಿ ಹತ್ಯೆ ಆರೋಪಿ
ಜಲ್ನಾ ಮುನ್ಸಿಪಲ್ ಪಾಲಿಕೆಯ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಬಿಜೆಪಿ ಮತ್ತು ಇತರ ಪಕ್ಷಗಳ ಅಭ್ಯರ್ಥಿಗಳನ್ನು ಸೋಲಿಸುವ ಮೂಲಕ ಶ್ರೀಕಾಂತ್ ಪಂಗಾರ್ಕರ್ 2,621 ಮತಗಳ ಅಂತರದಿಂದ ಗೆಲುವು ಸಾಧಿಸಿದ್ದಾರೆ.
ಒಂಬತ್ತು ವರ್ಷಗಳ ಹಿಂದೆ ರಾಷ್ಟ್ರಾದ್ಯಂತ ಸದ್ದು ಮಾಡಿದ್ದ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮಹಾರಾಷ್ಟ್ರದ ಸ್ಥಳೀಯ ಚುನಾವಣೆಯಲ್ಲಿ ಸ್ಪರ್ಧಿಸಿ ಗೆಲುವು ಸಾಧಿದ್ದಾರೆ.
ಶುಕ್ರವಾರ (ಜ.16) ಚುನಾವಣೆ ಫಲಿತಾಂಶ ಪ್ರಕಟವಾಗಿದ್ದು, ಜಲ್ನಾ ಮುನ್ಸಿಪಲ್ ಪಾಲಿಕೆಯ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಬಿಜೆಪಿ ಮತ್ತು ಇತರ ಪಕ್ಷಗಳ ಅಭ್ಯರ್ಥಿಗಳನ್ನು ಸೋಲಿಸುವ ಮೂಲಕ ಶ್ರೀಕಾಂತ್ ಪಂಗಾರ್ಕರ್ 2,621 ಮತಗಳ ಅಂತರದಿಂದ ಗೆಲುವು ಸಾಧಿಸಿದ್ದಾರೆ. ಮಹಾರಾಷ್ಟ್ರ ಡಿಸಿಎಂ ಏಕನಾಥ್ ಶಿಂಧೆ ನೇತೃತ್ವದ ಶಿವಸೇನೆ ವಾರ್ಡ್ನಲ್ಲಿ ಅಭ್ಯರ್ಥಿಯನ್ನು ಕಣಕ್ಕಿಳಿಸರಲಿಲ್ಲ. ಇದರಿಂದಾಗಿ ಸ್ಪರ್ಧೆಯು ಸ್ವತಂತ್ರರು ಮತ್ತು ಪ್ರತಿಸ್ಪರ್ಧಿ ಪಕ್ಷ ಅಭ್ಯರ್ಥಿಗಳ ನಡುವಿನ ಹೋರಾಟವಾಗಿ ಮಾರ್ಪಟ್ಟಿತು. ಆದರೆ ಕೊನೆಗೆ ಶ್ರೀಕಾಂತ್ ಪಂಗಾರ್ಕರ್ ಜಯ ಸಾಧಿಸಿದ್ದಾರೆ.
ವಿಚಾರಣೆಯ ನಡುವೆ ಗೆಲುವು
ಗೌರಿ ಲಂಕೇಶ್ ಹತ್ಯೆಗೆ ಸಂಬಂಧಿಸಿದ ಕ್ರಿಮಿನಲ್ ಪ್ರಕರಣ ವಿಚಾರಣೆಯಲ್ಲಿದ್ದಾಗಲೇ ಪಂಗಾರ್ಕರ್ ಅವರ ಗೆಲುವು ಬಂದಿದೆ. ತಮ್ಮ ಗೆಲುವಿನ ನಂತರ ಮಾಧ್ಯಮಗಳೊಂದಿಗೆ ಮಾತನಾಡಿದ ಪಂಗಾರ್ಕರ್, ತಮ್ಮ ವಿರುದ್ಧ ಇಲ್ಲಿಯವರೆಗೆ ಯಾವುದೇ ಶಿಕ್ಷೆಯಾಗಿಲ್ಲ.ಕಾನೂನು ಪ್ರಕ್ರಿಯೆ ಇನ್ನೂ ನಡೆಯುತ್ತಿದೆ ಎಂದು ತಿಳಿಸಿದ್ದಾರೆ.
ಗೌರಿ ಲಂಕೇಶ್ ಪ್ರಕರಣದ ಹಿನ್ನೆಲೆ
ಸೆಪ್ಟೆಂಬರ್ 5, 2017 ರಂದು ಬೆಂಗಳೂರಿನಲ್ಲಿ ತಮ್ಮ ಮನೆಯ ಹೊರಗೆ ಇದ್ದ ಪತ್ರಕರ್ತೆ ಗೌರಿ ಲಂಕೇಶ್ ಅವರನ್ನು ಗುಂಡಿಕ್ಕಿ ಹತ್ಯೆ ಮಾಡಲಾಗಿತ್ತು. ಈ ಕೊಲೆ ದೇಶಾದ್ಯಂತ ಆಕ್ರೋಶಕ್ಕೆ ಕಾರಣವಾಗಿತ್ತು. ದೇಶದಲ್ಲಿ ಅಭಿವ್ಯಕ್ತಿ ಸ್ವಾತಂತ್ರ್ಯ, ಭಿನ್ನಾಭಿಪ್ರಾಯ ಮತ್ತು ರಾಜಕೀಯ ಅಸಹಿಷ್ಣುತೆಯ ಬಗ್ಗೆ ವ್ಯಾಪಕ ಚರ್ಚೆಗೆ ಕಾರಣವಾಗಿತ್ತು. ಕೊಲೆ ನಂತರ ಪಂಗಾರ್ಕರ್ ಅವರನ್ನು ಈ ಪ್ರಕರಣದಲ್ಲಿ ಆರೋಪಿಯನ್ನಾಗಿ ಬಂಧಿಸಲಾಗಿತ್ತು. ಸೆಪ್ಟೆಂಬರ್ 4, 2024 ರಂದು ಕರ್ನಾಟಕ ಹೈಕೋರ್ಟ್ ಅವರಿಗೆ ಜಾಮೀನು ನೀಡಿತ್ತು.
ರಾಜಕೀಯ ಹಿನ್ನಲೆ
ಗೌರಿ ಲಂಕೇಶ್ ಹತ್ಯೆ ಆರೋಪಿ ಶ್ರೀಕಾಂತ್ ಪಂಗಾರ್ಕರ್ 2001ರಲ್ಲಿ ಅವಿಭಜಿತ ಶಿವಸೇನೆಯಿಂದ ಜಲ್ನಾ ಪುರಸಭೆಗೆ ಸದಸ್ಯರಾಗಿ ಸೇವೆ ಸಲ್ಲಿಸಿದ್ದಾರೆ. 2011 ರಲ್ಲಿ ಟಿಕೆಟ್ ನಿರಾಕರಿಸಿದ ನಂತರ, ಅವರು ಬಲಪಂಥೀಯ ಹಿಂದೂ ಜನಜಾಗೃತಿ ಸಮಿತಿಗೆ ಸೇರಿದ್ದರು. ಆಗಸ್ಟ್ 2018 ರಲ್ಲಿ, ರಾಜ್ಯದ ವಿವಿಧ ಭಾಗಗಳಿಂದ ಕಚ್ಚಾ ಬಾಂಬ್ಗಳು ಮತ್ತು ಶಸ್ತ್ರಾಸ್ತ್ರಗಳನ್ನು ವಶಪಡಿಸಿಕೊಂಡ ನಂತರ ಅವರನ್ನು ಮಹಾರಾಷ್ಟ್ರ ಭಯೋತ್ಪಾದನಾ ನಿಗ್ರಹ ದಳ ಬಂಧಿಸಿತ್ತು. ಆ ಸಮಯದಲ್ಲಿ, ಅವರ ಮೇಲೆ ಸ್ಫೋಟಕ ಕಾಯ್ದೆ, ಸ್ಫೋಟಕ ವಸ್ತುಗಳ ಕಾಯ್ದೆ ಮತ್ತು ಕಾನೂನುಬಾಹಿರ ಚಟುವಟಿಕೆಗಳ ತಡೆ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿತ್ತು.

