ಉನ್ನಾವೋ ಅತ್ಯಾಚಾರ ಪ್ರಕರಣ: ಕುಲದೀಪ್ ಸೆಂಗರ್ ಜಾಮೀನಿಗೆ ಸುಪ್ರೀಂ ಕೋರ್ಟ್ ತಡೆ
x
ಉನ್ನಾವೋ ಅತ್ಯಾಚಾರದ ಪ್ರಕರಣದ ಆರೋಪಿ ಕುಲದೀಪ್ ಸಿಂಗ್ ಸೆಂಗರ್‌

ಉನ್ನಾವೋ ಅತ್ಯಾಚಾರ ಪ್ರಕರಣ: ಕುಲದೀಪ್ ಸೆಂಗರ್ ಜಾಮೀನಿಗೆ ಸುಪ್ರೀಂ ಕೋರ್ಟ್ ತಡೆ

ಉನ್ನಾವೋ ಅತ್ಯಾಚಾರ ಪ್ರಕರಣದ ಅಪರಾಧಿ ಕುಲದೀಪ್ ಸಿಂಗ್ ಸೆಂಗರ್‌ಗೆ ದೆಹಲಿ ಹೈಕೋರ್ಟ್ ನೀಡಿದ್ದ ಜಾಮೀನಿಗೆ ಸುಪ್ರೀಂ ಕೋರ್ಟ್ ತಡೆ ನೀಡಿದೆ. ಸಿಬಿಐ ಮೇಲ್ಮನವಿ ಆಲಿಸಿದ ಸಿಜೆಐ ಸೂರ್ಯ ಕಾಂತ್ ಅವರ ಪೀಠವು ಈ ಪ್ರಮುಖ ಆದೇಶ ಹೊರಡಿಸಿದೆ.


Click the Play button to hear this message in audio format

ಉನ್ನಾವೋ ಅತ್ಯಾಚಾರ ಪ್ರಕರಣದ ಅಪರಾಧಿ, ಮಾಜಿ ಬಿಜೆಪಿ ಶಾಸಕ ಕುಲದೀಪ್ ಸಿಂಗ್ ಸೆಂಗರ್‌ನ ಜೀವಾವಧಿ ಶಿಕ್ಷೆಗೆ ಸುಪ್ರೀಂ ಕೋರ್ಟ್ ಸೋಮವಾರ ತಡೆಯಾಜ್ಞೆ ನೀಡಿದೆ ಕುಲದೀಪ್ ಸಿಂಗ್ ಸೆಂಗರ್‌ನ ಜೀವಾವಧಿ ಶಿಕ್ಷೆಯನ್ನು ಅಮಾನತ್ತಿನಲ್ಲಿಟ್ಟು ಜಾಮೀನು ನೀಡಿದ್ದ ದೆಹಲಿ ಹೈಕೋರ್ಟ್ ನೀಡಿದ್ದ ಜಾಮೀನು ಆದೇಶ ಪ್ರಶ್ನಿಸಿ ವಿರುದ್ಧ ಕೇಂದ್ರ ತನಿಖಾ ದಳ (CBI) ಸಲ್ಲಿಸಿದ್ದ ಅರ್ಜಿಯನ್ನು ಮೂವರು ನ್ಯಾಯಾಧೀಶರ ಪೀಠವು ವಿಚಾರಣೆ ನಡೆಸಿತು.

ಸುಪ್ರೀಂ ಕೋರ್ಟ್ ಆದೇಶ

ಭಾರತದ ಮುಖ್ಯ ನ್ಯಾಯಮೂರ್ತಿ (CJI) ಸೂರ್ಯ ಕಾಂತ್ ಅವರನ್ನೊಳಗೊಂಡ ಪೀಠವು ಈ ಆದೇಶ ನೀಡಿದ್ದು, "ಅಪರಾಧಿಯು ಮತ್ತೊಂದು ಪ್ರತ್ಯೇಕ ಅಪರಾಧದಲ್ಲೂ ಶಿಕ್ಷೆಗೊಳಗಾಗಿರುವ ವಿಶಿಷ್ಟ ಸಂಗತಿಗಳನ್ನು ಗಮನದಲ್ಲಿಟ್ಟುಕೊಂಡು, ಡಿಸೆಂಬರ್ 23, 2025ರ ದೆಹಲಿ ಹೈಕೋರ್ಟ್ ಆದೇಶಕ್ಕೆ ನಾವು ತಡೆ ನೀಡುತ್ತಿದ್ದೇವೆ. ಹೀಗಾಗಿ ಸೆಂಗರ್ ಜೈಲಿನಿಂದ ಬಿಡುಗಡೆಯಾಗುವಂತಿಲ್ಲ," ಎಂದು ತಿಳಿಸಿದೆ. ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ ಸಿಬಿಐ ಸಲ್ಲಿಸಿದ್ದ ಅರ್ಜಿಯ ಮೇರೆಗೆ ಸುಪ್ರೀಂ ಕೋರ್ಟ್ ಸೆಂಗರ್‌ನಿಗೆ ನೋಟಿಸ್ ಜಾರಿ ಮಾಡಿದೆ.

ಹಿನ್ನೆಲೆ

ಡಿಸೆಂಬರ್ 23ರಂದು ದೆಹಲಿ ಹೈಕೋರ್ಟ್, ಸೆಂಗರ್ ಈಗಾಗಲೇ 7 ವರ್ಷ 5 ತಿಂಗಳು ಜೈಲಿನಲ್ಲಿ ಕಳೆದಿದ್ದಾನೆ ಎಂಬ ಕಾರಣ ನೀಡಿ ಆತನ ಜೀವಾವಧಿ ಶಿಕ್ಷೆಯನ್ನು ಅಮಾನತ್ತಿನಲ್ಲಿಟ್ಟು ಷರತ್ತುಬದ್ಧ ಜಾಮೀನು ಮಂಜೂರು ಮಾಡಿತ್ತು. ಅಲ್ಲದೆ, ಸೆಂಗರ್‌ನನ್ನು ಪೋಕ್ಸೋ ಕಾಯ್ದೆಯಡಿ 'ಸಾರ್ವಜನಿಕ ಸೇವಕ' ಎಂದು ಪರಿಗಣಿಸಲು ಸಾಧ್ಯವಿಲ್ಲ ಎಂದು ಹೈಕೋರ್ಟ್ ಅಭಿಪ್ರಾಯಪಟ್ಟಿತ್ತು. ಈ ತೀರ್ಪನ್ನು ಪ್ರಶ್ನಿಸಿ ಸಿಬಿಐ ಸುಪ್ರೀಂ ಕೋರ್ಟ್ ಮೆಟ್ಟಿಲೇರಿತ್ತು.

ಸಂತ್ರಸ್ತೆಯ ಆಕ್ರೋಶ ಮತ್ತು ಪ್ರತಿಭಟನೆ

ಹೈಕೋರ್ಟ್ ಜಾಮೀನು ನೀಡಿದ್ದನ್ನು ವಿರೋಧಿಸಿ ದೆಹಲಿಯಲ್ಲಿ ಭಾರಿ ಪ್ರತಿಭಟನೆ ನಡೆದಿತ್ತು. ಅಖಿಲ ಭಾರತ ಪ್ರಗತಿಪರ ಮಹಿಳಾ ಸಂಘಟನೆ (AIPWA) ಆಯೋಜಿಸಿದ್ದ ಪ್ರತಿಭಟನೆಯಲ್ಲಿ ಸ್ವತಃ ಅತ್ಯಾಚಾರ ಸಂತ್ರಸ್ತೆ ಪಾಲ್ಗೊಂಡಿದ್ದರು. "ಅಧಿಕಾರಿಗಳಿಗೆ ಮತ್ತು ತನಿಖಾ ಸಂಸ್ಥೆಗಳಿಗೆ ಲಂಚ ನೀಡಿ ಜಾಮೀನು ಪಡೆಯಲಾಗಿದೆ" ಎಂದು ಸಂತ್ರಸ್ತೆ ಗಂಭೀರ ಆರೋಪ ಮಾಡಿದ್ದರು. ತನಗೆ ಸುಪ್ರೀಂ ಕೋರ್ಟ್‌ನಲ್ಲಿ ನ್ಯಾಯ ಸಿಗುವ ಭರವಸೆ ಇದೆ ಎಂದು ಅವರು ಈ ಸಂದರ್ಭದಲ್ಲಿ ತಿಳಿಸಿದ್ದರು.

ಪ್ರಕರಣದ ಹಾದಿ

2019 ಡಿಸೆಂಬರ್: ಉನ್ನಾವೋ ಅತ್ಯಾಚಾರ ಪ್ರಕರಣದಲ್ಲಿ ಕುಲದೀಪ್ ಸೆಂಗರ್ ತಪ್ಪಿತಸ್ಥ ಎಂದು ಘೋಷಣೆಯಾಗಿ ಜೀವಾವಧಿ ಶಿಕ್ಷೆ ಮತ್ತು ₹25 ಲಕ್ಷ ದಂಡ ವಿಧಿಸಲಾಯಿತು.

2025 ಡಿಸೆಂಬರ್ 23: ದೆಹಲಿ ಹೈಕೋರ್ಟ್‌ನಿಂದ ಜಾಮೀನು ಮಂಜೂರು.

2025 ಡಿಸೆಂಬರ್ 29: ಸಿಬಿಐ ಮೇಲ್ಮನವಿ ಆಲಿಸಿದ ಸುಪ್ರೀಂ ಕೋರ್ಟ್‌ನಿಂದ ಹೈಕೋರ್ಟ್ ಆದೇಶಕ್ಕೆ ತಡೆ.

ಪ್ರಕರಣದ ಹಿನ್ನೆಲೆ

ಉನ್ನಾವೋ ಅತ್ಯಾಚಾರ ಪ್ರಕರಣವು ಭಾರತೀಯ ನ್ಯಾಯಾಂಗ ಮತ್ತು ರಾಜಕೀಯ ಇತಿಹಾಸದಲ್ಲಿ ಅತ್ಯಂತ ಭೀಕರ ಹಾಗೂ ಅಧಿಕಾರ ದುರ್ಬಳಕೆಯ ಪ್ರಕರಣಗಳಲ್ಲಿ ಒಂದೆಂದು ಪರಿಗಣಿಸಲ್ಪಟ್ಟಿದೆ. ಜೂನ್ 2017 ರಲ್ಲಿ, ಉತ್ತರ ಪ್ರದೇಶದ ಉನ್ನಾವೋ ಜಿಲ್ಲೆಯ ಬಂಗಾರ್‌ಮೌ ಕ್ಷೇತ್ರದ ಅಂದಿನ ಬಿಜೆಪಿ ಶಾಸಕ ಕುಲದೀಪ್ ಸಿಂಗ್ ಸೆಂಗರ್ ಕೆಲಸ ಕೊಡಿಸುವ ಆಮಿಷವೊಡ್ಡಿ ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ್ದಾಗಿ ಆರೋಪ ಕೇಳಿಬಂದಿತ್ತು. ಸಂತ್ರಸ್ತ ಬಾಲಕಿ ನ್ಯಾಯಕ್ಕಾಗಿ ಸ್ಥಳೀಯ ಪೊಲೀಸ್ ಠಾಣೆ ಅಲೆದರೂ ಪ್ರಭಾವಿ ಶಾಸಕನ ವಿರುದ್ಧ ಎಫ್‌ಐಆರ್ ದಾಖಲಿಸಲು ಪೊಲೀಸರು ನಿರಾಕರಿಸಿದ್ದರು.

ಏಪ್ರಿಲ್ 2018 ರಲ್ಲಿ, ನ್ಯಾಯ ಸಿಗದಿದ್ದಾಗ ಸಂತ್ರಸ್ತೆ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರ ನಿವಾಸದ ಮುಂದೆ ಆತ್ಮಹತ್ಯೆಗೆ ಯತ್ನಿಸಿದರು. ಇದು ರಾಷ್ಟ್ರಮಟ್ಟದಲ್ಲಿ ಸುದ್ದಿಯಾಯಿತು. ಇದೇ ಸಮಯದಲ್ಲಿ ಶಾಸಕನ ಸಹೋದರ ಮತ್ತು ಆತನ ಬೆಂಬಲಿಗರು ಸಂತ್ರಸ್ತೆಯ ತಂದೆಯ ಮೇಲೆ ಹಲ್ಲೆ ನಡೆಸಿದ್ದರು. ಪೊಲೀಸರು ಸಂತ್ರಸ್ತೆಯ ತಂದೆಯನ್ನೇ ಜೈಲಿಗೆ ಕಳುಹಿಸಿದರು ಮತ್ತು ಅಲ್ಲಿಯೇ ಅವರು ತೀವ್ರ ಗಾಯಗಳಿಂದ ಮೃತಪಟ್ಟರು. ಈ ಘಟನೆ ಪ್ರಕರಣಕ್ಕೆ ದೊಡ್ಡ ತಿರುವು ನೀಡಿತು.

ಅಪಘಾತ ಮತ್ತು ಜೀವ ಬೆದರಿಕೆ (2019)

ಜುಲೈ 2019 ರಲ್ಲಿ, ಸಂತ್ರಸ್ತೆ ಮತ್ತು ಆಕೆಯ ಕುಟುಂಬದವರು ಪ್ರಯಾಣಿಸುತ್ತಿದ್ದ ಕಾರಿಗೆ ಟ್ರಕ್ ಡಿಕ್ಕಿ ಹೊಡೆಯಿತು. ಈ ಘಟನೆಯಲ್ಲಿ ಸಂತ್ರಸ್ತೆಯ ಇಬ್ಬರು ಚಿಕ್ಕಮ್ಮಂದಿರು ಮೃತಪಟ್ಟರು ಮತ್ತು ಸಂತ್ರಸ್ತೆ ಹಾಗೂ ವಕೀಲರು ಗಂಭೀರವಾಗಿ ಗಾಯಗೊಂಡರು. ಇದು ಕೊಲೆ ಯತ್ನ ಎಂಬ ಆರೋಪ ಕೇಳಿಬಂದಿತು. ಸುಪ್ರೀಂ ಕೋರ್ಟ್ ಈ ಪ್ರಕರಣವನ್ನು ಗಮನಕ್ಕೆ ತೆಗೆದುಕೊಂಡು ಎಲ್ಲಾ ವಿಚಾರಣೆಗಳನ್ನು ಉತ್ತರ ಪ್ರದೇಶದಿಂದ ದೆಹಲಿಗೆ ವರ್ಗಾಯಿಸಿತು.

ಬಿಜೆಪಿಯಿಂದ ಉಚ್ಚಾಟನೆ

ಸಾರ್ವಜನಿಕ ಆಕ್ರೋಶಕ್ಕೆ ಮಣಿದ ಬಿಜೆಪಿ ಪಕ್ಷವು ಕುಲದೀಪ್ ಸೆಂಗರ್‌ನನ್ನು ಪಕ್ಷದಿಂದ ಉಚ್ಚಾಟಿಸಿತು. ಡಿಸೆಂಬರ್ 2019 ರಲ್ಲಿ ದೆಹಲಿಯ ವಿಶೇಷ ನ್ಯಾಯಾಲಯವು ಸೆಂಗರ್‌ನನ್ನು ತಪ್ಪಿತಸ್ಥ ಎಂದು ಘೋಷಿಸಿ ಜೀವಾವಧಿ ಶಿಕ್ಷೆ ಮತ್ತು ₹25 ಲಕ್ಷ ದಂಡ ವಿಧಿಸಿತು. ಅಲ್ಲದೆ, ಸಂತ್ರಸ್ತೆಯ ತಂದೆಯ ಸಾವಿನ ಪ್ರಕರಣದಲ್ಲೂ ಆತನಿಗೆ 10 ವರ್ಷಗಳ ಶಿಕ್ಷೆ ವಿಧಿಸಲಾಯಿತು.

Read More
Next Story