
ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್
Bengaluru stampede: ಸಿಎಂ, ಡಿಸಿಎಂ, ಗೃಹಸಚಿವರ ವಿರುದ್ದ ಕಬ್ಬನ್ ಪಾರ್ಕ್ ಠಾಣೆಯಲ್ಲಿ ಬಿಜೆಪಿ ದೂರು ದಾಖಲು
ಕ್ರೀಡಾಂಗಣದ ಬಳಿ ನೂಕುನುಗ್ಗಲು ಉಂಟಾಗಿ 11 ಮಂದಿ ಮೃತಪಟ್ಟು 56 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದರು. ಈ ದುರಂತಕ್ಕೆ ಸರ್ಕಾರವೇ ನೇರ ಕಾರಣವಾಗಿದ್ದು ಸಿಎಂ, ಡಿಸಿಎಂ ಹಾಗೂ ಗೃಹ ಸಚಿವರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಪಿ. ರಾಜೀವ್ ಕೋರಿದ್ದಾರೆ.
ಎಂ. ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ನಡೆದ ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ. ಶಿವಕುಮಾರ್ ಹಾಗೂ ಗೃಹ ಸಚಿವ ಡಾ.ಜಿ. ಪರಮೇಶ್ವರ್ ವಿರುದ್ಧ ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಪಿ. ರಾಜೀವ್ ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.
ಬುಧವಾರ(ಜೂ.4) ರಂದು ವಿಧಾನಸೌಧದ ಮೆಟ್ಟಿಲುಗಳ ಮೇಲೆ ಆರ್ಸಿಬಿ ಆಟಗಾರರಿಗೆ ಸನ್ಮಾನ ಕಾರ್ಯಕ್ರಮ ಆಯೋಜಿಸಲಾಗಿತ್ತು. ಸಂಜೆ ಕ್ರೀಡಾಂಗದ ಬಳಿ ಆರ್ಸಿಬಿ ವಿಜಯೋತ್ಸವ ಕಣ್ತುಂಬಿಕೊಳ್ಳಲು ಲಕ್ಷಾಂತರ ಅಭಿಮಾನಿಗಳು ಸೇರಿದ್ದರು. ಈ ವೇಳೆ ನೂಕುನುಗ್ಗಲು ಉಂಟಾಗಿ 11 ಜನರು ಮೃತಪಟ್ಟು 56 ಕ್ಕೂ ಹೆಚ್ಚು ಅಭಿಮಾನಿಗಳು ಗಾಯಗೊಂಡಿದ್ದರು. ಈ ದುರಂತಕ್ಕೆ ಸರ್ಕಾರವೇ ನೇರ ಕಾರಣವಾಗಿದ್ದು ಸಿಎಂ, ಡಿಸಿಎಂ ಹಾಗೂ ಗೃಹ ಸಚಿವರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಕೋರಿದ್ದಾರೆ.
ದೂರಿನಲ್ಲೇನಿದೆ ?
ಮಂಗಳವಾರ(ಜೂ.3) ದಂದು ನಡೆದ ಐಪಿಎಲ್ ಫೈನಲ್ ಪಂದ್ಯಾವಳಿಯಲ್ಲಿ ಆರ್ಸಿಬಿ ಗೆಲುವು ಸಾಧಿಸಿತ್ತು. ಬುಧವಾರ ತಂಡ ಬೆಂಗಳೂರಿಗೆ ಆಗಮಿಸಲಿದ್ದು ಲಕ್ಷಾಂತರ ಅಭಿಮಾನಿಗಳು ಕ್ರೀಡಾಪಟುಗಳನ್ನು ನೋಡಲು ಆಗಮಿಸುತ್ತಾರೆ ಎಂದು ಗುಪ್ತಚರದಳಕ್ಕೆ ತಿಳಿದಿತ್ತು. ಆದರೂ ಯಾವುದೇ ಪೂರ್ವ ತಯಾರಿ ಇಲ್ಲದೆ ಸಿಎಂ ಹಾಗೂ ಡಿಸಿಎಂ ಅಧಿಕಾರಿಗಳ ಮೇಲೆ ಒತ್ತಡ ತಂದು ಕಾರ್ಯಕ್ರಮ ಆಯೋಜಿಸಿದ್ದಾರೆ. ಸಮಾರಂಭದಲ್ಲಿ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಮುಖ್ಯಮಂತ್ರಿಯವರ ಅಧಿಕೃತ ʼಎಕ್ಸ್ʼ ಖಾತೆಯಿಂದ ಮುಕ್ತ ಆಹ್ವಾನ ಕೊಟ್ಟ ಪರಿಣಾಮ ವಿಧಾನಸೌಧ ಹಾಗೂ ಕ್ರೀಡಾಂಗಣದ ಬಳಿ ಲಕ್ಷಾಂತರ ಅಭಿಮಾನಿಗಳು ಸೇರಿದ್ದರಿಂದ ಈ ದುರಂತ ಸಂಭವಿಸಿದೆ.
ಸರ್ಕಾರದ ನಿರ್ಲಕ್ಷ್ಯ, ಕಾರ್ಯಕ್ರಮ ಆಯೋಜಿಸಲು ಯಾವುದೇ ಪೂರ್ವ ತಯಾರಿ ಮಾಡಿಕೊಳ್ಳದಿರುವುದು, ಸಾವು-ನೋವು ಸಂಭವಿಸಬಹುದು ಎಂಬ ಮಾಹಿತಿ ಇದ್ದರೂ ಸರ್ಕಾರ ಅಧಿಕಾರ ದುರ್ಬಳಕೆ ಮಾಡಿಕೊಂಡು ಕಾರ್ಯಕ್ರಮ ಆಯೋಜನೆ ಮಾಡಿರುವ ಸಿಎಂ, ಡಿಸಿಎಂ ಹಾಗೂ ಗೃಹ ಸಚಿವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕೆಂದು ತಿಳಿಸಿದ್ದಾರೆ.