I have not asked to change the account: Home Minister Dr. G. Parameshwar clarifies
x

ಗೃಹ ಸಚಿವ ಡಾ.ಜಿ. ಪರಮೇಶ್ವರ್‌ ಅವರು ಕೇಂದ್ರ ಸಚಿವ ವಿ. ಸೋಮಣ್ಣನವರನ್ನು ಭೇಟಿಯಾಗಿ ಮನವಿ ಪತ್ರ ಸಲ್ಲಿಸಿದರು.

ನಾನು ಖಾತೆ ಬದಲಾವಣೆಗೆ ಕೇಳಿಲ್ಲ, ಇದೆಲ್ಲ ಸತ್ಯಕ್ಕೆ ದೂರ": ಗೃಹ ಸಚಿವ ಡಾ. ಪರಮೇಶ್ವರ್ ಸ್ಪಷ್ಟನೆ

ಖಾತೆ ಬದಲಾವಣೆ ಕುರಿತಂತೆ ನಿಮಗೆ ಯಾರು ಹೇಳಿದರು. ಒಂದು ವೇಳೆ ನಿಮಗೆ ಯಾರೋ ಹೇಳಿದರು‌ ಎಂಬ ಮಾತು ಬಂದಾಗ ನನ್ನನ್ನು ನೇರವಾಗಿ ಕೇಳಿ ಸ್ಪಷ್ಟಪಡಿಸಿಕೊಳ್ಳಬಹುದಲ್ಲವೆ ಎಂದು ಗೃಹ ಸಚಿವ ಡಾ. ಜಿ. ಪರಮೇಶ್ವರ್‌ ತಿಳಿಸಿದರು.


ಬೆಂಗಳೂರಿನಲ್ಲಿ ನಡೆದ ದುರದೃಷ್ಟಕರ ಘಟನೆಗಳ ಬೆನ್ನಲ್ಲೇ ಗೃಹ ಸಚಿವ ಸ್ಥಾನ ಬದಲಾವಣೆ ಕುರಿತು ಹಬ್ಬಿದ್ದ ವದಂತಿಗಳಿಗೆ ಗೃಹ ಸಚಿವ ಡಾ. ಜಿ. ಪರಮೇಶ್ವರ್ ಸ್ಪಷ್ಟನೆ ನೀಡಿದ್ದಾರೆ. ನಾನು ಯಾವುದೇ ಕಾರಣಕ್ಕೂ ಮುಖ್ಯಮಂತ್ರಿಯವರನ್ನು ಖಾತೆ ಬದಲಾಯಿಸುವಂತೆ ಕೇಳಿಲ್ಲ ಎಂದು ಸ್ಪಷ್ಟನೆ ನೀಡಿದ್ದಾರೆ.

ಸೋಮವಾರ ಮಾಧ್ಯಮದವರೊಂದಿಗೆ ಮಾತನಾಡಿದ ಡಾ. ಪರಮೇಶ್ವರ್, "ನಾನು ಯಾವತ್ತೂ ಇಂತಹ ಖಾತೆ ಬೇಕು ಎಂದು ಮುಖ್ಯಮಂತ್ರಿಯವರನ್ನು ಕೇಳಿಲ್ಲ. ಬೆಂಗಳೂರಿನಲ್ಲಿ ದುರದೃಷ್ಟಕರ ಘಟನೆ ನಡೆದಿದೆ. ಇಂತಹ ಘಟನೆಗಳಾಗಬಾರದು. ಇದರಿಂದ ನಾವು ನೋವನ್ನು ಅನುಭವಿಸುತ್ತಿದ್ದೇವೆ. ಇಂತಹ ಸವಾಲುಗಳನ್ನು ಎದುರಿಸಬೇಕು. ಖಾತೆ ಬದಲಾಯಿಸುವಂತೆ ಮುಖ್ಯಮಂತ್ರಿಯವರು ಸೇರಿದಂತೆ ಯಾರ ಬಳಿಯೂ ಮಾತನಾಡೇ ಇಲ್ಲ," ಎಂದು ಹೇಳಿದರು.

ಖಾತೆ ಬದಲಾವಣೆ ಕುರಿತಂತೆ ಸುದ್ದಿ ಮಾಡುವ ಮೊದಲು ನೇರವಾಗಿ ತಮ್ಮನ್ನು ಕೇಳಿ ಸ್ಪಷ್ಟಪಡಿಸಿಕೊಳ್ಳಬಹುದಿತ್ತು ಎಂದು ಮಾಧ್ಯಮದವರನ್ನು ಉದ್ದೇಶಿಸಿ ಮಾತನಾಡಿದ ಅವರು, ಪತ್ನಿ ಸೇರಿದಂತೆ ಯಾರ ಬಳಿಯೂ ರಾಜಕೀಯದ ಬಗ್ಗೆ ಮಾತನಾಡುವುದಿಲ್ಲ. ಖಾತೆ ಬದಲಾಯಿಸುವಂತೆ ಆಪ್ತರ ಬಳಿ ಹೇಳಿದರು, ಮುಖ್ಯಮಂತ್ರಿಯವರ ಬಳಿ ಕೇಳಿದರು ಎಂದು ಸುದ್ದಿ ಮಾಡುವ ಮೊದಲೇ ಸ್ಪಷ್ಟನೆ ಪಡೆದುಕೊಳ್ಳಬೇಕಿತ್ತು ಎಂದು ಡಾ. ಪರಮೇಶ್ವರ್ ತಿಳಿಸಿದರು.

ಸುಹಾಸ್ ಶೆಟ್ಟಿ ಪ್ರಕರಣ ಎನ್‌ಐಎಗೆ ವರ್ಗಾವಣೆ

ಮಂಗಳೂರಿನಲ್ಲಿ ನಡೆದ ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣವನ್ನು ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ಗೆ ಹಸ್ತಾಂತರಿಸುವ ವಿಚಾರವಾಗಿ ಕೇಂದ್ರ ಗೃಹ ಇಲಾಖೆಯಿಂದ ಪತ್ರ ಬಂದಿದೆ. ಈ ಪತ್ರದ ಬಗ್ಗೆ ಸೋಮವಾರ (ಜೂನ್ 9) ಸಭೆ ನಡೆಸಿ ಪ್ರಕರಣವನ್ನು ಎನ್‌ಐಎಗೆ ನೀಡಬೇಕೆ ಅಥವಾ ಬೇಡವೆ ಎಂದು ನಿರ್ಧಾರ ಮಾಡುತ್ತೇವೆ ಎಂದು ಡಾ. ಪರಮೇಶ್ವರ್ ತಿಳಿಸಿದರು. ರಾಜ್ಯ ಪೊಲೀಸ್ ಇಲಾಖೆ ಕೂಡ ಸಮರ್ಥವಾಗಿ ತನಿಖೆ ಮಾಡುತ್ತಿದೆ. ಯಾವ ಆಧಾರದ ಮೇಲೆ ಪ್ರಕರಣದ ವರ್ಗಾವಣೆಗೆ ಕೇಳಿದ್ದಾರೆ ಎಂಬುದು ಗೊತ್ತಿಲ್ಲ. ಈ ಬಗ್ಗೆ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿ ಸೂಕ್ತ ನಿರ್ಧಾರ ತೆಗೆದುಕೊಳ್ಳುವುದಾಗಿ ಅವರು ಹೇಳಿದರು.

ತುಮಕೂರು ಹೆದ್ದಾರಿಯಲ್ಲಿ ಸ್ವಾಗತ ಕಮಾನು, ಮೆಟ್ರೋ ವಿಸ್ತರಣೆ ಚರ್ಚೆ

ತುಮಕೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಸ್ವಾಗತ ಕಮಾನು ಹಾಕಲು ಐದು ಕೋಟಿ ರೂ. ಹಣ ಮೀಸಲಿಟ್ಟಿದ್ದು, ಕಮಾನು ಹಾಕಲು ಅನುಮತಿ ಕೊಡಿಸುವಂತೆ ಕೇಂದ್ರ ಸಚಿವ ವಿ. ಸೋಮಣ್ಣ ಅವರನ್ನು ಭೇಟಿ ಮಾಡಿ ಮನವಿ ಮಾಡಿದ್ದೇನೆ. ಅವರ ಮೂಲಕ ಕೇಂದ್ರ ರಸ್ತೆ ಸಾರಿಗೆ ಹಾಗೂ ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಅವರಿಗೆ ಮನವಿ ಸಲ್ಲಿಸಲಾಗುವುದು. ಕೇಂದ್ರದಿಂದ ರಾಜ್ಯಕ್ಕೆ ಅನೇಕ ಯೋಜನೆಗಳು ಆಗಬೇಕಾಗಿದೆ. ತುಮಕೂರು ನಗರಕ್ಕೆ ಬರುವ ಪ್ರಯಾಣಿಕರಿಗೆ ಮಾಹಿತಿ ನೀಡುವ ಉದ್ದೇಶದಿಂದ ಸ್ವಾಗತ ಕಮಾನು ಹಾಕಲಾಗುವುದು ಎಂದು ಪರಮೇಶ್ವರ್ ಮಾಹಿತಿ ನೀಡಿದರು.

ತುಮಕೂರಿಗೆ ಮೆಟ್ರೋ ವಿಸ್ತರಣೆ ಕುರಿತು ಪ್ರತಿಕ್ರಿಯಿಸಿದ ಅವರು, ಕೇಂದ್ರ ಸಚಿವ ವಿ. ಸೋಮಣ್ಣ ಮೆಟ್ರೋ ವಿಸ್ತರಣೆ ಆಗಬೇಕು ಎಂದು ಹೇಳಿದ್ದಾರೆ. ಕೇಂದ್ರ ಸರ್ಕಾರದ ತೀರ್ಮಾನದ ಬಳಿಕ ಈ ಬಗ್ಗೆ ಮಾತನಾಡುತ್ತೇವೆ. ಸಬ್‌ಅರ್ಬನ್ ರೈಲು ಬೇಕಾದರೆ ಆಗಲಿ, ಆದರೆ ಮೆಟ್ರೋ ವಿಸ್ತರಣೆ ಆಗಬಾರದು ಎಂದಿಲ್ಲ. ತುಮಕೂರು ನಗರ ವೇಗವಾಗಿ ಬೆಳೆಯುತ್ತಿದೆ. ಕೈಗಾರಿಕಾ ಹಬ್ ಆಗಿದೆ, ಬೆಂಗಳೂರು ನಗರದ ರೀತಿ ತುಮಕೂರು ನಗರವನ್ನು ವಿಸ್ತರಣೆ ಮಾಡಬೇಕು. ಗ್ರೇಟರ್ ತುಮಕೂರು ನಿರ್ಮಿಸುವಷ್ಟು ನಗರ ಬೆಳೆಯಬೇಕು ಎಂದು ಆಶಿಸಿದರು.

ಹೇಮಾವತಿ ಗಲಾಟೆ ವಿವಾದದ ವಿಚಾರವಾಗಿ ಈಗಾಗಲೇ ಮನವಿ ಮಾಡಲಾಗಿದ್ದು, ರಾಜ್ಯ ಜಲಸಂಪನ್ಮೂಲ ಸಚಿವರ ಬಳಿ ಮಾತನಾಡಿ ನಂತರ ಸಭೆ ಕರೆಯುವುದರ ಬಗ್ಗೆ ತೀರ್ಮಾನ ಮಾಡುತ್ತೇವೆ ಎಂದರು.

ದೆಹಲಿಗೆ ಕರೆದಿಲ್ಲ: ಕಾಲ್ತುಳಿತ ಪ್ರಕರಣ ತನಿಖೆ ಕುರಿತು ಸ್ಪಷ್ಟನೆ

ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಹೈಕಮಾಂಡ್ ದೂರವಾಣಿ ಮೂಲಕ ಸಂಪರ್ಕ ಮಾಡಿದ್ದಾರೆ. ಆದರೆ ಯಾರೂ ಸಹ ದೆಹಲಿ, ಬಾಂಬೆಗೆ ಕರೆದಿಲ್ಲ ಎಂದು ಡಾ. ಪರಮೇಶ್ವರ್ ಸ್ಪಷ್ಟಪಡಿಸಿದರು. ಈ ಕುರಿತು ಈಗಾಗಲೇ ಸಿಎಂ ಮತ್ತು ಡಿಸಿಎಂ ಅವರಿಂದ ಮಾಹಿತಿ ಪಡೆದಿದ್ದಾರೆ. ಪ್ರಕರಣ ಕುರಿತಂತೆ ನಿವೃತ್ತ ನ್ಯಾಯಮೂರ್ತಿ ಜಾನ್ ಮೈಕಲ್ ಡಿ ಕುನ್ಹಾ ಅವರ ನೇತೃತ್ವದಲ್ಲಿ ತನಿಖೆಗೆ ಆದೇಶಿಸಲಾಗಿದೆ. ಈ ಕುರಿತು ತಾವು ಹೇಳಿಕೆ ಕೊಟ್ಟರೆ ತನಿಖೆ ಮೇಲೆ ಪ್ರಭಾವ ಬೀರುತ್ತದೆ. ತನಿಖೆ ವೇಳೆ ನಮ್ಮನ್ನು ಕೇಳಿದರೆ ಹೇಳುತ್ತೇವೆ ಎಂದು ಅವರು ತಿಳಿಸಿದರು.

Read More
Next Story