
ಮಹದಾಯಿ ನದಿ
ಮಹದಾಯಿ ಯೋಜನೆಗೆ ಚಾಲನೆ ನೀಡಲು ಧಾರವಾಡದಲ್ಲಿ ರೈತರ ಪ್ರತಿಭಟನೆ
ಮಹದಾಯಿ ಯೋಜನೆಗೆ ನಾಲ್ಕು ದಶಕಗಳಿಂದ ಹೋರಾಟ ನಡೆಸುತ್ತಿದ್ದರೂ ಯಾವುದೇ ಪ್ರಯೋಜನವಾಗಿಲ್ಲ ಎಂದು ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ವಿರುದ್ದ ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು.
ಮಹದಾಯಿ ನದಿ ನೀರಿಗಾಗಿ ದಶಕಗಳಿಂದ ಹೋರಾಟ ನಡೆಸುತ್ತಿರುವ ರೈತರು ಧಾರವಾಡದಲ್ಲಿ ಮಂಗಳವಾರ ಮತ್ತೊಮ್ಮೆ ತಮ್ಮ ಧ್ವನಿ ಎತ್ತಿದ್ದಾರೆ. ಉತ್ತರ ಕರ್ನಾಟಕದ ನಾನಾ ಭಾಗಗಳಿಂದ ಆಗಮಿಸಿದ ರೈತರು, ನಗರದ ಪ್ರಮುಖ ರಸ್ತೆಗಳಲ್ಲಿ ಸಂಚರಿಸಿ ಜಿಲ್ಲಾಧಿಕಾರಿ ಕಚೇರಿ ತಲುಪಿ, ಮಹದಾಯಿ ಯೋಜನೆಗೆ ಶೀಘ್ರವಾಗಿ ಚಾಲನೆ ನೀಡುವಂತೆ ಆಗ್ರಹಿಸಿದರು.
ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದ ರೈತರು, ನಾಲ್ಕು ದಶಕಗಳಿಂದ ಹೋರಾಟ ನಡೆಸುತ್ತಿದ್ದರೂ ಯಾವುದೇ ಪ್ರಯೋಜನವಾಗಿಲ್ಲ ಎಂದು ಅಸಮಾಧಾನ ಹೊರಹಾಕಿದರು.
ಕುಡಿಯುವ ನೀರಿನ ಉದ್ದೇಶಕ್ಕಾಗಿ ರಾಜ್ಯದ ಧಾರವಾಡ, ಬೆಳಗಾವಿ, ಗದಗ ಹಾಗೂ ಬಾಗಲಕೋಟೆ ಜಿಲ್ಲೆಗಳಿಗೆ ನೀರು ಹಂಚಿಕೆ ಮಾಡಲಾಗಿದ್ದರೂ, ಗೋವಾ ಸರ್ಕಾರ ಒಂದಿಲ್ಲೊಂದು ಕಾರಣ ನೀಡಿ ಯೋಜನೆಗೆ ಅಡ್ಡಿಪಡಿಸುತ್ತಿದೆ ಎಂದು ರೈತರು ಆರೋಪಿಸಿದರು. ಜೊತೆಗೆ, ಅರಣ್ಯ ಇಲಾಖೆ ಅನುಮತಿ ನೀಡಲು ವಿಳಂಬ ಮಾಡುತ್ತಿದ್ದು, ಮೂರು ಪ್ರಮುಖ ರಾಜಕೀಯ ಪಕ್ಷಗಳು ಈ ವಿಚಾರವನ್ನು ಕೇವಲ ಚುನಾವಣೆಗೆ ಮಾತ್ರ ಬಳಸಿಕೊಳ್ಳುತ್ತಿವೆ ಎಂದು ಹೋರಾಟಗಾರರು ದೂರಿದರು. ತಮ್ಮ ಆಕ್ರೋಶವನ್ನು ವ್ಯಕ್ತಪಡಿಸಲು ನಗರದ ಜ್ಯೂಬಿಲಿ ಸರ್ಕಲ್ ಬಳಿ ಮಾನವ ಸರಪಳಿ ನಿರ್ಮಿಸಿ ಘೋಷಣೆಗಳನ್ನು ಕೂಗಿದರು.
ಇತ್ತೀಚೆಗೆ ಬೆಳಗಾವಿಗೆ ಭೇಟಿ ನೀಡಿದ್ದ ಸಂದರ್ಭದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಮಹದಾಯಿ ಯೋಜನೆಗೆ ಅರಣ್ಯ ಇಲಾಖೆ ಅನುಮತಿ ನೀಡಿಲ್ಲ ಎಂದು ಸ್ಪಷ್ಟಪಡಿಸಿದ್ದರು. ಕೇಂದ್ರ ಸರ್ಕಾರ ಹಣ ಹಾಗೂ ಅನುಮತಿ ನೀಡಿದ ತಕ್ಷಣ ಮೇಕೆದಾಟು, ಭದ್ರಾ ಸೇರಿದಂತೆ ವಿವಿಧ ನೀರಾವರಿ ಯೋಜನೆಗಳ ಕಾಮಗಾರಿ ಆರಂಭಿಸಲಾಗುವುದು ಎಂದು ಅವರು ಭರವಸೆ ನೀಡಿದ್ದರು.
-ಕಳಸಾ-ಬಂಡೂರಿ ಯೋಜನೆ ಮತ್ತು ವಿಳಂಬ
ನೀರಿನ ಸಮಸ್ಯೆಯನ್ನು ಪರಿಹರಿಸಲು ಸರ್ಕಾರ ಕಳಸಾ ಮತ್ತು ಬಂಡೂರಿ ಎಂಬ ಎರಡು ಹೊಸ ಯೋಜನೆಗಳನ್ನು ಆರಂಭಿಸಿತ್ತು. ಕಳಸಾ ಯೋಜನೆಯಲ್ಲಿ, ಕಳಸಾ ನದಿಗೆ ಅಣೆಕಟ್ಟು ಹಾಗೂ 4.8 ಕಿ.ಮೀ ಉದ್ದದ ಕಾಲುವೆ ನಿರ್ಮಿಸುವ ಉದ್ದೇಶವಿತ್ತು. ಇದರ ಜೊತೆಗೆ, ಹಳತಾರಾ ನದಿಗೆ ಅಣೆಕಟ್ಟು ನಿರ್ಮಿಸಿ ಅಲ್ಲಿ ಸಂಗ್ರಹವಾದ 3.56 ಟಿಎಂಸಿ ನೀರನ್ನು 5.5 ಕಿ.ಮೀ ಉದ್ದದ ಕಾಲುವೆ ಮೂಲಕ ಕಳಸಾ ಅಣೆಕಟ್ಟೆಗೆ ಸಾಗಿಸಲು ಯೋಜಿಸಲಾಗಿತ್ತು. ಬಂಡೂರಿ ಯೋಜನೆಯಲ್ಲಿ, ಸಿಂಗಾರ ನಾಲಾ ಹಾಗೂ ವಾಟಿ ನಾಲಾಗಳಿಗೆ ಅಣೆಕಟ್ಟು ಕಟ್ಟಿ ಸಂಗ್ರಹವಾದ ನೀರನ್ನು ಬಂಡೂರಿ ಜಲಾಶಯಕ್ಕೆ ವರ್ಗಾಯಿಸಿ, ಅಲ್ಲಿ ಸಂಗ್ರಹವಾದ 4 ಟಿಎಂಸಿ ನೀರನ್ನು 5.15 ಕಿ.ಮೀ ಕಾಲುವೆ ಮೂಲಕ ಮಲಪ್ರಭಾ ನದಿಗೆ ವರ್ಗಾಯಿಸುವ ಯೋಜನೆಯನ್ನು ಸರ್ಕಾರ ರೂಪಿಸಿತ್ತು.
ಆರಂಭದಲ್ಲಿ ಈ ಯೋಜನೆಗಳಿಗೆ ಸಮ್ಮತಿ ಸೂಚಿಸಿದ್ದ ಗೋವಾ ಸರ್ಕಾರ ನಂತರ ತಗಾದೆ ತೆಗೆದಿದ್ದರಿಂದ, ಕರ್ನಾಟಕ ಸರ್ಕಾರ ಕಳಸಾ ಯೋಜನೆಗೆ ಕೋಟ್ಯಂತರ ರೂಪಾಯಿ ಹಣ ಸುರಿದಿದ್ದರೂ ಕಾಮಗಾರಿ ಅರ್ಧಕ್ಕೆ ನಿಂತಿದೆ. ಇತ್ತ, ಬಂಡೂರಿ ನಾಲಾ ಯೋಜನೆಯ ಕಾಮಗಾರಿಗೆ ಇನ್ನೂ ಚಾಲನೆಯೇ ಸಿಕ್ಕಿಲ್ಲ.
ಮಹದಾಯಿ ಜಲಾನಯನ ಪ್ರದೇಶ ಮತ್ತು ಆರ್ಥಿಕ ಸಿದ್ಧತೆ
ಮಹದಾಯಿ ನದಿಯು ಒಟ್ಟು 2,032 ಚದರ ಕಿ.ಮೀ. ಜಲಾನಯನ ಪ್ರದೇಶವನ್ನು ಹೊಂದಿದ್ದು, ಕರ್ನಾಟಕದಲ್ಲಿ 375 ಚದರ ಕಿ.ಮೀ, ಮಹಾರಾಷ್ಟ್ರದಲ್ಲಿ 77 ಚದರ ಕಿ.ಮೀ ಹಾಗೂ ಗೋವಾದಲ್ಲಿ 1,580 ಚದರ ಕಿ.ಮೀ ಪ್ರದೇಶವನ್ನು ವ್ಯಾಪಿಸಿದೆ.
2022ರ ಜುಲೈನಲ್ಲಿ ರಾಜ್ಯ ಸರ್ಕಾರ ಸಲ್ಲಿಸಿದ್ದ 1,300 ಕೋಟಿ ರೂಪಾಯಿ ಮೊತ್ತದ ಪರಿಷ್ಕೃತ ವಿಸ್ತೃತ ಯೋಜನಾ ವರದಿಗೆ (ಡಿಪಿಆರ್) ಕೇಂದ್ರ ಜಲ ಆಯೋಗ ಹಾಗೂ ಅಂತಾರಾಜ್ಯ ನದಿ ನೀರು ವಿವಾದ ಪ್ರಾಧಿಕಾರದ ಅನುಮೋದನೆ ದೊರಕಿದೆ. ಕೇಂದ್ರ ಜಲಶಕ್ತಿ ಸಚಿವಾಲಯವೂ ಅನುಮತಿ ನೀಡಿದೆ. ಯೋಜನೆಯ ಉದ್ದೇಶಕ್ಕಾಗಿ 2022ರ ಬಜೆಟ್ನಲ್ಲಿ ರಾಜ್ಯ ಸರ್ಕಾರ 1,000 ಕೋಟಿ ರೂ. ಮೀಸಲಿಟ್ಟಿದೆ. ಆದರೆ, ಅರಣ್ಯ ಇಲಾಖೆ ಅನುಮತಿ ಮಾತ್ರ ದೊರೆತಿಲ್ಲ ಎಂದು ರೈತ ಮುಖಂಡರು ಬೇಸರ ವ್ಯಕ್ತಪಡಿಸಿದ್ದಾರೆ.