Protest near Vidhana Soudha, case registered against bike taxi drivers
x

ವಿಧಾನಸೌಧದ ಮುಂದೆ ಬೈಕ್‌ ಟ್ಯಾಕ್ಸಿ ಚಾಲಕರು ಪ್ರತಿಭಟನೆ ನಡೆಸಿದರು. 

ವಿಧಾನಸೌಧದ ಬಳಿ ಪ್ರತಿಭಟನೆ, ಬೈಕ್‌ ಟ್ಯಾಕ್ಸಿ ಚಾಲಕರ ಮೇಲೆ ಪ್ರಕರಣ ದಾಖಲು

ಬೈಕ್‌ ಟ್ಯಾಕ್ಸಿಗಳಿಗೆ ಸರ್ಕಾರ ನಿಯಮಗಳನ್ನು ರೂಪಿಸಬೇಕು ಹಾಗೂ ನಿಷೇದ ವಾಪಸ್‌ ಪಡೆಯಬೇಕು ಎಂದು ಪ್ರತಿಭಟನೆ ನಡೆಸುತ್ತಿದ್ದ ಬೈಕ್‌ ಟ್ಯಾಕ್ಸಿ ಚಾಲಕರ ವಿರುದ್ಧ ಪ್ರಕರಣ ದಾಖಲಿಸಿ ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.


ರಾಜ್ಯದಲ್ಲಿ ಬೈಕ್ ಟ್ಯಾಕ್ಸಿ ಸೇವೆ ನಿಷೇಧಿಸಿರುವ ಸರ್ಕಾರದ ನಿರ್ಧಾರವನ್ನು ವಿರೋಧಿಸಿ ವಿಧಾನಸೌಧದ ಬಳಿ ಕಾನೂನುಬಾಹಿರವಾಗಿ ಪ್ರತಿಭಟನೆ ನಡೆಸಿದ ಆರೋಪದಡಿ 10ಕ್ಕೂ ಹೆಚ್ಚು ಬೈಕ್ ಟ್ಯಾಕ್ಸಿ ಚಾಲಕರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.

ಬೈಕ್ ಟ್ಯಾಕ್ಸಿಗಳಿಗೆ ಸರ್ಕಾರ ನಿಯಮಗಳನ್ನು ರೂಪಿಸಬೇಕು ಹಾಗೂ ನಿಷೇಧವನ್ನು ವಾಪಸ್ ಪಡೆಯಬೇಕು ಎಂದು ಆಗ್ರಹಿಸಿ ಪ್ರತಿಭಟನೆ ನಡೆಸುತ್ತಿದ್ದ ಚಾಲಕರಾದ ಮನೋಜ್, ಶಶಿಕಾಂತ್, ಕುಮಾರಸ್ವಾಮಿ, ಲಕ್ಷ್ಮೀ ಸಾಗರ್, ಚಂದ್ರಶೇಖರ್, ಪವನ್ ಕುಮಾರ್, ಜಾನ್‌ಪಾಷಾ ಸೇರಿದಂತೆ 10ಕ್ಕೂ ಅಧಿಕ ಮಂದಿ ವಿರುದ್ಧ ವಿಧಾನಸೌಧ ಠಾಣೆಯಲ್ಲಿ ಎಫ್‌ಐಆರ್ ದಾಖಲಿಸಿ ತನಿಖೆ ಕೈಗೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಪ್ರತಿಭಟನೆಗೆ ಸ್ವಾತಂತ್ರ್ಯ ಉದ್ಯಾನದಲ್ಲಿ ಮಾತ್ರ ಅವಕಾಶ

ಬೈಕ್ ಟ್ಯಾಕ್ಸಿಗಳಿಗೆ ನಿಯಮ ರೂಪಿಸುವಂತೆ ಹಾಗೂ ಸೇವೆ ಮುಂದುವರಿಸುವಂತೆ ಆಗ್ರಹಿಸಿ ಬೆಂಗಳೂರು, ಮೈಸೂರು, ಹಾಸನ ಸೇರಿದಂತೆ ರಾಜ್ಯದ ವಿವಿಧೆಡೆಯಿಂದ ಐದು ಸಾವಿರಕ್ಕೂ ಅಧಿಕ ಬೈಕ್ ಟ್ಯಾಕ್ಸಿ ಚಾಲಕರು ಶನಿವಾರ (ಜೂನ್ 21) ವಿಧಾನಸೌಧದ ಎದುರು ರ್ಯಾಲಿ ನಡೆಸುವ ಬಗ್ಗೆ ಸಾಮಾಜಿಕ ಜಾಲತಾಣಗಳಿಂದ ಪೊಲೀಸರಿಗೆ ಮಾಹಿತಿ ಸಿಕ್ಕಿತ್ತು. ಇದನ್ನು ಆಧರಿಸಿ, ಪೊಲೀಸರು ಮುಂಜಾಗ್ರತಾ ಕ್ರಮವಾಗಿ ವಿಧಾನಸೌಧದ ಅಂಬೇಡ್ಕರ್ ಪ್ರತಿಮೆ ಬಳಿ ಬಂದೋಬಸ್ತ್ ಮಾಡಿದ್ದರು. ಮಧ್ಯಾಹ್ನ ಸುಮಾರು ೨.20ಕ್ಕೆ 15 ರಿಂದ 20 ಮಂದಿ ಕಾಲ್ನಡಿಗೆಯಲ್ಲಿ ವಿಧಾನಸೌಧದ ಎದುರಿನ ಕೆಂಪೇಗೌಡ ಪ್ರತಿಮೆ ಬಳಿಗೆ ಬಂದು ಗುಂಪು ಕಟ್ಟಿಕೊಂಡು ಪ್ರತಿಭಟನೆ ಮಾಡಿದ್ದಾರೆ ಎಂದು ದೂರು ದಾಖಲಿಸಲಾಗಿದೆ. ಪ್ರತಿಭಟನೆಗಳನ್ನು ಅನುಮತಿ ಪಡೆದು ಸ್ವಾತಂತ್ರ್ಯ ಉದ್ಯಾನದಲ್ಲಿ ಮಾತ್ರ ನಡೆಸಬೇಕು ಎಂದು ಹೈಕೋರ್ಟ್ ಆದೇಶಿಸಿದೆ. ಆದರೆ, ಪ್ರತಿಭಟನಾಕಾರರು ಯಾವುದೇ ಅನುಮತಿ ಇಲ್ಲದೆ ವಿಧಾನಸೌಧದ ಬಳಿ ಪ್ರತಿಭಟನೆ ನಡೆಸಿದ್ದಾರೆ ಎಂದು ಪೊಲೀಸರು ಸ್ಪಷ್ಟಪಡಿಸಿದ್ದಾರೆ.

ಬೈಕ್ ಟ್ಯಾಕ್ಸಿ ವಿವಾದ: ಏನಿದು ಸಮಸ್ಯೆ?

ರಾಜ್ಯದಲ್ಲಿ ಬೈಕ್ ಟ್ಯಾಕ್ಸಿಗಳನ್ನು ನಿಷೇಧಿಸಿ ಹೈಕೋರ್ಟ್ ಇತ್ತೀಚೆಗೆ ಆದೇಶ ಹೊರಡಿಸಿತ್ತು. ನ್ಯಾಯಾಲಯದ ಆದೇಶವನ್ನು ಮೀರಿ, ಹಲವು ಬೈಕ್ ಟ್ಯಾಕ್ಸಿಗಳು 'ಪಾರ್ಸೆಲ್ ಸೇವೆ'ಯ ಹೆಸರಿನಲ್ಲಿ ಕಾರ್ಯಾಚರಣೆ ಮುಂದುವರಿಸಿದ್ದವು. ಇದರಿಂದ ಎಚ್ಚೆತ್ತುಕೊಂಡ ಸಾರಿಗೆ ಇಲಾಖೆ ಅಧಿಕಾರಿಗಳು ನೂರಕ್ಕೂ ಹೆಚ್ಚು ಬೈಕ್ ಟ್ಯಾಕ್ಸಿಗಳನ್ನು ಜಪ್ತಿ ಮಾಡಿದ್ದರು. ಬೈಕ್ ಟ್ಯಾಕ್ಸಿಗಳು ಮಾತ್ರವಲ್ಲದೆ, ವೈಟ್ ಬೋರ್ಡ್ ಕಾರುಗಳನ್ನು ವಾಣಿಜ್ಯ ಉದ್ದೇಶಕ್ಕೆ ಬಳಸುವಂತಿಲ್ಲ ಎಂದು ಸಾರಿಗೆ ಇಲಾಖೆ ಅಧಿಕಾರಿಗಳು ಎಚ್ಚರಿಕೆ ನೀಡಿದ್ದಾರೆ.

ಸರ್ಕಾರ ನೀತಿ ರೂಪಿಸಲಿ

ರಾಜ್ಯ ಸರ್ಕಾರ ಬೈಕ್ ಟ್ಯಾಕ್ಸಿಗಳಿಗೆ ಸ್ಪಷ್ಟ ನೀತಿ ರೂಪಿಸಿ ನಿಷೇಧವನ್ನು ವಾಪಸ್ ಪಡೆಯಬೇಕು ಎಂದು ಬೈಕ್ ಟ್ಯಾಕ್ಸಿ ಅಸೋಸಿಯೇಷನ್ ವತಿಯಿಂದ ಇತ್ತೀಚೆಗೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್‌ಗೆ ಮನವಿ ಸಲ್ಲಿಸಿದ್ದರು. "ನಿಷೇಧ ಹೇರಿರುವುದರಿಂದ ಜೀವನ ನಡೆಸಲು ಕಷ್ಟವಾಗುತ್ತಿದೆ. ಆಟೋ ಚಾಲಕರ ಸಂಘಗಳಿಂದಲೂ ಅನೇಕ ಕಿರುಕುಳ ನೀಡಲಾಗುತ್ತಿದೆ. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಸಂಸತ್ ಪ್ರತಿಪಕ್ಷದ ನಾಯಕ ರಾಹುಲ್ ಗಾಂಧಿ ಹಾಗೂ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಪತ್ರ ಬರೆದರೂ ಇದುವರೆಗೂ ಸ್ಪಂದಿಸಿಲ್ಲ" ಎಂದು ಬೈಕ್ ಟ್ಯಾಕ್ಸಿ ಅಸೋಸಿಯೇಷನ್ ಅಧ್ಯಕ್ಷ ಮೊಹಮ್ಮದ್ ಸಲೀಂ ಬೇಸರ ವ್ಯಕ್ತಪಡಿಸಿದ್ದಾರೆ.

ಆಟೋ-ಕಾರು ಬಾಡಿಗೆ ಏರಿಕೆ ಮತ್ತು ಸಾರ್ವಜನಿಕರ ಸಂಕಷ್ಟ

ಬೈಕ್ ಟ್ಯಾಕ್ಸಿ ನಿಷೇಧಿಸಿದ ಹಿನ್ನೆಲೆಯಲ್ಲಿ ಆ್ಯಪ್ ಆಧಾರಿತ ಆಟೋ ಹಾಗೂ ಕಾರುಗಳ ಬಾಡಿಗೆಯನ್ನು ಏರಿಕೆ ಮಾಡಲಾಗಿದೆ ಎಂದು ಸಾರ್ವಜನಿಕರು ಆರೋಪಿಸಿದ್ದಾರೆ. ಕಡಿಮೆ ದೂರಕ್ಕೂ ಹೆಚ್ಚಿನ ಬೆಲೆ ನೀಡಿ ಪ್ರಯಾಣಿಸಬೇಕಾಗಿದೆ ಎಂದು ಅವರು ಅಳಲು ತೋಡಿಕೊಂಡಿದ್ದಾರೆ. ಸರ್ಕಾರ ಬೈಕ್ ಟ್ಯಾಕ್ಸಿಗಳಿಗೆ ಸೂಕ್ತ ನಿಯಮಗಳನ್ನು ರೂಪಿಸಿ ನಿಷೇಧವನ್ನು ವಾಪಸ್ ಪಡೆದರೆ ಎಲ್ಲರಿಗೂ ಅನುಕೂಲವಾಗುತ್ತದೆ ಎಂದು ಸಾರ್ವಜನಿಕರು ಅಭಿಪ್ರಾಯಪಟ್ಟಿದ್ದಾರೆ. ಈ ವಿವಾದವು ಬೈಕ್ ಟ್ಯಾಕ್ಸಿ ಚಾಲಕರ ಜೀವನೋಪಾಯ ಮತ್ತು ನಗರ ಸಾರಿಗೆ ವ್ಯವಸ್ಥೆಯ ಮೇಲೆ ಗಮನಾರ್ಹ ಪರಿಣಾಮ ಬೀರಿದೆ.

Read More
Next Story