RCB Champion | ಆರ್‌ಸಿಬಿ ಆಟಗಾರರಿಗೆ ಸನ್ಮಾನ; ಸಾರ್ವಜನಿಕರಿಗೆ ಪ್ರವೇಶ ನಿರ್ಬಂಧ
x

RCB Champion | ಆರ್‌ಸಿಬಿ ಆಟಗಾರರಿಗೆ ಸನ್ಮಾನ; ಸಾರ್ವಜನಿಕರಿಗೆ ಪ್ರವೇಶ ನಿರ್ಬಂಧ

ವಿಧಾನಸೌಧದ ಮೆಟ್ಟಿಲುಗಳ ಮೇಲೆ ಹಲವಾರು ಐತಿಹಾಸಿಕ ಕಾರ್ಯಕ್ರಮಗಳು ನಡೆದಿದ್ದು, ಇದೀಗ ಅದೇ ಮೆಟ್ಟಿಲುಗಳ ಮೇಲೆ ಆರ್‌ಸಿಬಿ ಆಟಗಾರರಿಗೆ ಸರ್ಕಾರ ಸನ್ಮಾನ ಕಾರ್ಯಕ್ರಮ ಏರ್ಪಡಿಸಿದೆ.


ಐಪಿಎಲ್‌ ಚಾಂಪಿಯನ್‌ ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು ತಂಡಕ್ಕೆ ಸರ್ಕಾರದ ವತಿಯಿಂದ ವಿಧಾನಸೌಧದ ಮೆಟ್ಟಿಲುಗಳ ಮೇಲೆ ಸನ್ಮಾನ ಕಾರ್ಯಕ್ರಮ ಏರ್ಪಡಿಸಿದ್ದು, ಸಾರ್ವಜನಿಕರಿಗೆ ಪ್ರವೇಶ ನಿರ್ಬಂಧಿಸಲಾಗಿದೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಸಚಿವರು ಆರ್‌ಸಿಬಿ ಆಟಗಾರರನ್ನು ಸನ್ಮಾನಿಸಲು ಅಗತ್ಯ ಸಿದ್ದತೆ ಮಾಡಿಕೊಂಡಿದ್ದಾರೆ. ವಿಧಾನಸೌಧದ ಮೆಟ್ಟಿಲುಗಳ ಮೇಲೆ ಹಲವಾರು ಐತಿಹಾಸಿಕ ಕಾರ್ಯಕ್ರಮಗಳು ನಡೆದಿದ್ದು, ಅವುಗಳ ಸಾಲಿಗೆ ಆರ್‌ಸಿಬಿ ಆಟಗಾರರಿಗೆ ಸನ್ಮಾನ ಕಾರ್ಯಕ್ರಮ ಏರ್ಪಡಿಸಲಾಗಿದೆ.

ವಿಧಾನಸೌಧದಿಂದ ಎಂ.ಚಿನ್ನಸ್ವಾಮಿ ಕ್ರೀಡಾಂಗಣದವರೆಗೆ ತೆರೆದ ವಾಹನದಲ್ಲಿ ಆಟಗಾರರ ಮೆರವಣಿಗೆ ನಡೆಸಲು ಉದ್ದೇಶಿಸಲಾಗಿತ್ತು. ಆದರೆ, ಭದ್ರತಾ ಕಾರಣಗಳಿಂದ ಮೆರವಣಿಗೆ ರದ್ದುಪಡಿಸಲಾಗಿದೆ ಎಂದು ಗೃಹ ಸಚಿವ ಡಾ.ಜಿ. ಪರಮೇಶ್ವರ್‌ ತಿಳಿಸಿದ್ದಾರೆ.

ಆರ್‌ಸಿಬಿ ಅಭಿಮಾನಿಗಳು ಹಾಗೂ ಸಾರ್ವಜನಿಕರ ದಟ್ಟಣೆ ಹೆಚ್ಚಾಗುವ ಹಿನ್ನೆಲೆಯಲ್ಲಿ ಸಾರ್ವಜನಿಕರಿಗೆ ಪ್ರವೇಶ ನಿರಾಕರಿಸಲಾಗಿದೆ. ಕ್ರಿಕೆಟ್‌ ಅಭಿಮಾನಿಗಳು ವಿಧಾನಸೌಧದ ಹೊರಗೆ ಕಾರ್ಯಕ್ರಮ ವೀಕ್ಷಣೆ ಮಾಡಬಹುದು.

ಸಂಚಾರ ದಟ್ಟಣೆ ಹಾಗೂ ಭದ್ರತೆ ದೃಷ್ಟಿಯಿಂದ ವಿಧಾನಸೌಧದ ಸುತ್ತಮುತ್ತ ಹೆಚ್ಚಿನ ಪೊಲೀಸರನ್ನು ನಿಯೋಜಿಸಲಾಗಿದೆ. ಎಂ.ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಬುಧವಾರ ಸಂಜೆ ದೊಡ್ಡಮಟ್ಟದ ಸಂಭ್ರಮಾಚರಣೆ ನಡೆಯಲಿದ್ದು, ಸವಾರರಿಗೆ ಸಂಚಾರ ದಟ್ಟಣೆಯ ಬಿಸಿ ತಟ್ಟಲಿದೆ.

Read More
Next Story