ಮಾಹಿತಿ ಆಯುಕ್ತರ ನೇಮಕ ಪ್ರಶ್ನಿಸಿ ರಿಟ್: ಇಂದು ಹೈಕೋರ್ಟ್ ವಿಚಾರಣೆ
ʼಮಂಗಳವಾರವೇ (ಫೆ.4) ಪ್ರಮಾಣ ವಚನ ಸ್ವೀಕಾರ ಕಾರ್ಯಕ್ರಮ ನಿಗದಿಯಾಗಿದ್ದು, ಅಷ್ಟರೊಳಗೆ ಈ ಅರ್ಜಿ ವಿಚಾರಣೆಗೆ ಕೈಗೆತ್ತಿಕೊಳ್ಳಬೇಕು. ಇಲ್ಲವಾದಲ್ಲಿ ಅರ್ಜಿ ನಿಷ್ಟ್ರಯೋಜಕವಾಗುತ್ತದೆ' ಎಂದು ಅರ್ಜಿದಾರರು ಮನವಿ ಮಾಡಿದ್ದಾರೆ.
ಕರ್ನಾಟಕ ಮಾಹಿತಿ ಹಕ್ಕು ಆಯೋಗದ ಮುಖ್ಯ ಆಯುಕ್ತರಾಗಿ ಎ.ಎಂ. ಪ್ರಸಾದ್ ಹಾಗೂ ಆಯುಕ್ತರಾಗಿ ಕೆ.ರಾಮನ್, ಡಾ.ಹರೀಶ್ ಕುಮಾರ್, ರುದ್ರಣ್ಣ ಹರ್ತಿಕೋಟೆ, ನಾರಾಯಣ ಜಿ.ಚನ್ನಾಳ, ಎಸ್.ರಾಜಶೇಖರ, ಕೆ.ಬದ್ರುದ್ದೀನ್ ಮತ್ತು ಬಿ.ಆರ್.ಮಮತಾ ಅವರ ನೇಮಕಾತಿ ಪ್ರಶ್ನಿಸಿ ಹೈಕೋರ್ಟ್ಗೆ ರಿಟ್ ಅರ್ಜಿ ಸಲ್ಲಿಸಲಾಗಿದೆ.
ಈ ಕುರಿತಂತೆ ಹುದ್ದೆಯ ಆಕಾಂಕ್ಷಿಯಾಗಿದ್ದ ಜೆ.ಪಿ.ನಗರ 7ನೇ ಹಂತದ ನಿವಾಸಿಯಾದ ಸಾಮಾಜಿಕ ಕಾರ್ಯಕರ್ತ ಕೆ.ಮಲ್ಲಿಕಾರ್ಜುನ ರಾಜು ಸಲ್ಲಿಸಿರುವ ಅರ್ಜಿಯು ನ್ಯಾಯಮೂರ್ತಿ ಆರ್.ದೇವದಾಸ್ ಅವರ ಏಕಸದಸ್ಯ ನ್ಯಾಯಪೀಠದಲ್ಲಿ ಮಂಗಳವಾರ (ಫೆ.04) ವಿಚಾರಣೆಗೆ ನಿಗದಿಯಾಗಿದೆ.
'ಮಂಗಳವಾರವೇ (ಫೆ.4) ಪ್ರಮಾಣ ವಚನ ಸ್ವೀಕಾರ ಕಾರ್ಯಕ್ರಮ ನಿಗದಿಯಾಗಿದ್ದು, ಅಷ್ಟರೊಳಗೆ ಈ ಅರ್ಜಿ ವಿಚಾರಣೆಗೆ ಕೈಗೆತ್ತಿಕೊಳ್ಳಬೇಕು. ಇಲ್ಲವಾದಲ್ಲಿ ಅರ್ಜಿ ನಿಷ್ಟ್ರಯೋಜಕವಾಗುತ್ತದೆ' ಎಂದು ಅರ್ಜಿದಾರರು ಮನವಿ ಮಾಡಿದ್ದಾರೆ.
ಅರ್ಜಿಯ ವಿವರ
ರಾಜ್ಯ ಮಾಹಿತಿ ಆಯೋಗದ ಮುಖ್ಯ ಆಯುಕ್ತರು ಹಾಗೂ ಮಾಹಿತಿ ಆಯುಕ್ತರ ನೇಮಕ ಪ್ರಕ್ರಿಯೆಯಲ್ಲಿ ಸಲ್ಲಿಕೆಯಾಗುವ ಅರ್ಜಿಗಳ ಪರಿಶೀಲನೆಗೆ ಶೋಧನಾ ಸಮಿತಿ ರಚನೆ ಮಾಡಬೇಕು. ಬಳಿಕ ಆಯ್ಕೆಯಾದವರ ಪಟ್ಟಿಯನ್ನು ಆಯ್ಕೆ ಸಮಿತಿಯ ಮುಂದೆ ಮಂಡಿಸಬೇಕು ಎಂಬುದಾಗಿ ಅಂಜಲಿ ಭಾರಧ್ವಾಜ್ ವಿರುದ್ಧದ ಕೇಂದ್ರ ಸರ್ಕಾರದ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಸ್ಪಷ್ಟ ನಿರ್ದೇಶನ ನೀಡಿದೆ.
ಆದರೆ, ರಾಜ್ಯ ಸರ್ಕಾರ ಶೋಧನಾ ಸಮಿತಿ ರಚನೆ ಮಾಡದೆಯೇ 2024ರ ಜೂನ್ 11ರಂದು ಅರ್ಜಿಗಳನ್ನು ಆಹ್ವಾನ ಮಾಡಿದೆ. ಜೊತೆಗೆ, ಸಲ್ಲಿಕೆಯಾಗಿದ್ದ 184 ಅರ್ಜಿಗಳ ಯಾವುದೇ ರೀತಿಯ ಪರಿಶೀಲನೆ ನಡೆಸದೆ, ಏಳು ಮಂದಿಯನ್ನು ನೇಮಕ ಮಾಡಿ 2025ರ ಜನವರಿ 30ರಂದು ಆದೇಶ ಹೊರಡಿಸಿದೆ. ಇದು ಸುಪ್ರೀಂ ಕೋರ್ಟ್ನ ಆದೇಶವನ್ನು ಉಲ್ಲಂಘಿಸಿದಂತಾಗಲಿದೆ ಎಂದು ಅರ್ಜಿಯಲ್ಲಿ ತಿಳಿಸಲಾಗಿದೆ.
ರಾಜ್ಯ ಮುಖ್ಯ ಮಾಹಿತಿ ಆಯುಕ್ತರ ಹುದ್ದೆಗೆ ಆಯ್ಕೆಯಾಗಿರುವ ಎ.ಎಂ.ಪ್ರಸಾದ್ ಅವರು ನಿಗದಿತ ಹುದ್ದೆಗಾಗಿ ಅರ್ಜಿಯನ್ನು ಸಲ್ಲಿಸಿಯೇ ಇಲ್ಲ. ಆದರೆ, ರಾಜ್ಯ ಮಾಹಿತಿ ಆಯುಕ್ತರ ಹುದ್ದೆಗೆ ಮಾತ್ರ ಅರ್ಜಿ ಸಲ್ಲಿಸಿದ್ದಾರೆ. ಆದರೆ, ಯಾವುದೇ ವಿವರಣೆ ಇಲ್ಲದೆ ಅವರನ್ನು ಮುಖ್ಯ ಮಾಹಿತಿ ಆಯುಕ್ತರನ್ನಾಗಿ ನೇಮಕ ಮಾಡಲಾಗಿದೆ ಎಂದು ಆರೋಪಿಸಲಾಗಿದೆ.
ಅಲ್ಲದೆ, ಎ.ಎಂ.ಪ್ರಸಾದ್ ಜನ್ಮ ಪ್ರಮಾಣ ಪತ್ರದ ಪ್ರಕಾರ 2025ರ ಅಕ್ಟೋಬರ್ 29ಕ್ಕೆ 65 ವರ್ಷ ತಲುಪಲಿದ್ದಾರೆ. ಹೀಗಿರುವಾಗ, ಮುಖ್ಯ ಆಯುಕ್ತರ ಹುದ್ದೆಯನ್ನು ಕೇವಲ 9 ತಿಂಗಳು ಮಾತ್ರ ಕಾರ್ಯನಿರ್ವಹಣೆ ಮಾಡಲಿದ್ದಾರೆ. ಅಲ್ಲದೆ, ಅವರು ಅರ್ಜಿ ಸಲ್ಲಿಸದ ಹುದ್ದೆಗೆ ನೇಮಕ ಮಾಡಲಾಗಿದ್ದು ವಿಶೇಷ ಸೌಲಭ್ಯವನ್ನು ನೀಡಿದೆ ಎಂದು ಅರ್ಜಿಯಲ್ಲಿ ತಿಳಿಸಿದ್ದಾರೆ.
ಆದರೆ, ತಾವು ಈವರೆಗೂ ರಾಜ್ಯ ಮಾಹಿತಿ ಆಯುಕ್ತರ ಹುದ್ದೆಗೆ ಮೂರು ಬಾರಿ ಅರ್ಜಿ ಸಲ್ಲಿಸಿದ್ದೇನೆ. ಆದರೆ, ನಮ್ಮ ಅರ್ಜಿ ಪರಿಗಣಿಸಿಲ್ಲ. ಆದ್ದರಿಂದ ಸರ್ಕಾರ ನೇಮಕಾತಿ ಆದೇಶವನ್ನು ರದ್ದುಪಡಿಸಿ ಆದೇಶಿಸಬೇಕು. ಶೋಧನಾ ಸಮಿತಿ ರಚನೆ ಮಾಡಿ ಸುಪ್ರೀಂ ಕೋರ್ಟ್ ಆದೇಶದಂತೆ ಕಾನೂನುಬದ್ಧವಾಗಿ ನೇಮಕ ಪ್ರಕ್ರಿಯೆ ನಡೆಸಬೇಕು ಎಂದು ಅರ್ಜಿದಾರರು ಕೋರಿದ್ದಾರೆ.